ಬೆಂಗಳೂರು: ಡಾ. ಅಭಿನವ ಸಂಗನಬಸವ ಮಹಾಸ್ವಾಮಿಗಳ ನಿಧನರಾದ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ಈ ಬಗ್ಗೆ ಪತ್ರಿಕಾಹೇಳಿಕೆ ಬಿಡುಗಡೆ ಮಾಡಿರುವ ಅವರು ಶ್ರೀಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕೊಡುಗೆಗಳನ್ನು ಸ್ಮರಿಸಿದ್ದಾರೆ.
ಹಂಪಿ ಹೇಮಕೂಠ, ಬಳ್ಳಾರಿ ಮತ್ತು ಹಾಲಕೆರೆಮಠ, ಬಾದಾಮಿ ಶಿವಯೋಗ ಮಂದಿರದ ಅಧ್ಯಕ್ಷರು, ಜಗದ್ಗುರುಗಳು ಆದ ಡಾ. ಅಭಿನವ ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಶ್ರೀಗಳು ವಿವಿಧ ರಂಗಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವ ಸಾಮಾಜಿಕ, ಶೈಕ್ಷಣಿಕ ಸುಧಾರಣೆಗಾಗಿ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದ್ದರು. ನಾಡಿನ ಬಡವರು, ಸೌಲಭ್ಯ ವಂಚಿತ ಜನರ ಬಗೆಗೆ ಅಪಾರ ಕಾಳಜಿ ಹೊಂದಿದ್ದ ಶ್ರೀಗಳು ಅವರ ಕಲ್ಯಾಣಕ್ಕಾಗಿ ದೀರ್ಘಕಾಲದಿಂದ ಶ್ರಮಿಸುತ್ತಾ ಬಂದಿದ್ದರು. ಅವರ ಹಠಾತ್ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.