ಮಂಗಳೂರು, ಮಂಗಳೂರು-ಬೆಂಗಳೂರು ಸಂಪರ್ಕಿಸುವ 26 ಕಿ.ಮೀ. ಉದ್ದದ ಶಿರಾಡಿ ಘಾಟ್ ಅನ್ನು ನಾಲ್ಕು ಪಥದ ಹೆದ್ದಾರಿಯಾಗಿ ಪರಿವರ್ತಿಸಲು ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ಅವರು ಸೋಮವಾರ ನಗರದ ಕುಲಶೇಖರದಲ್ಲಿ
ಕೇಂದ್ರ ರಸ್ತೆ-ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮತ್ತು ಲೋಕೋಪಯೋಗಿ ಇಲಾಖೆಯಿಂದ 3,163.47 ಕೋಟಿ ರೂಪಾಯಿ ವೆಚ್ಚದ 164.22 ಕಿ.ಮೀ. ದೂರದ 15 ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಮಾಡಿ ಮಾತನಾಡಿದರು.
ಸುಮಾರು 14 ಸಾವಿರ ಕೋಟಿ ರು. ವೆಚ್ಚದಲ್ಲಿ ಶಿರಾಡಿ ಘಾಟ್ ನಾಲ್ಕು ಪಥದ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಆದರೆ ಪರಿಸರ ಹಾಗೂ ಅರಣ್ಯ ಇಲಾಖೆಯಿಂದ ಅನುಮತಿ ದೊರಕಿದ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದರು.
ಶಿರಾಡಿ ಘಾಟ್ನಲ್ಲಿ ಸುರಂಗ ಮಾರ್ಗ ರಚನೆಗೂ ಉದ್ದೇಶಿಸಲಾಗಿದ್ದು, ಇದು 7 ಸುರಂಗ ಹಾಗೂ 6 ಸೇತುವೆಯನ್ನು ಒಳಗೊಳ್ಳಲಿದೆ. ಇಲ್ಲಿ ಕೂಡ ಅರಣ್ಯ
ಮತ್ತು ಪರಿಸರ ಇಲಾಖೆಯ ಅನುಮತಿ ಸಿಕ್ಕಿದರೆ ಕಾರ್ಯಸಾಧ್ಯತಾ ವರದಿ ತಯಾರಿಗೆ ಸೂಚನೆ ನೀಡಲಾಗುವುದು. ಈ ಕಾಮಗಾರಿಗಳು ಪೂರ್ಣಗೊಂಡರೆ ಚೆನ್ನೈ-ಮಂಗಳೂರು ಬಂದರು ಸಂಪರ್ಕ ಸುಲಭವಾಗಲಿದ್ದು, ಇದು ಕರಾವಳಿ ಭಾಗದ ಜೀವನಾಡಿಯಾಗಲಿದೆ ಎಂದು ಹೇಳಿದರು.
ವರ್ತುಲ ರಿಂಗ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಸಿಮೆಂಟ್ ಮತ್ತು ಕಬ್ಬಿಣ ಮೇಲಿನ ಜಿಎಸ್ಟಿ ಕಡಿತಗೊಳಿಸುವಂತೆ ಜಿಎಸ್ಟಿ ಮಂಡಳಿಯನ್ನು ಕೋರಲಾಗಿದೆ. ಇದರಲ್ಲಿ ವಿನಾಯ್ತಿ ಸಿಕ್ಕಿದರೆ ರಿಂಗ್ ರಸ್ತೆ ನಿರ್ಮಾಣ ಸುಲಭವಾಗಲಿದೆ ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಬೈಪಾಸ್ ರಸ್ತೆ ರಚನೆಗೆ ಭೂಸ್ವಾಧೀನ ವೇಳೆ ಇಲ್ಲಿವರೆಗೆ ಶೇ.50ರಷ್ಟು ಜಿಎಸ್ಟಿ ಪಾವತಿಸಬೇಕಾಗುತ್ತಿತ್ತು. ಇನ್ನು ಮುಂದೆ ಇದನ್ನು ಶೇ.25ಕ್ಕೆ ಇಳಿಕೆ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ಜತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳಲಿದೆ. ಇದರಿಂದಾಗಿ ಮುಂದಿನ ಎರಡು
ವರ್ಷಗಳಲ್ಲಿ ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಬೈಪಾಸ್ ರಸ್ತೆಗಳು ಪೂರ್ಣಗೊಳ್ಳಲಿವೆ ಎಂದರು.