ಬೆಂಗಳೂರು: ಸಾತನೂರಿನಲ್ಲಿ ನೈತಿಕ ಪೊಲೀಸ್ ಗಿರಿ, ಹತ್ಯೆಗೆ ಸಿಎಂ, ಗೃಹಸಚಿವರೇ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಸಾತನೂರಿನಲ್ಲಿ ನೈತಿಕ ಪೊಲೀಸ್ ಗಿರಿಯ ಭಾಗವಾಗಿ ಒಬ್ಬನ ಕೊಲೆಯಾಗಿದೆ. ಪೊಲೀಸರು ಈ ವಿಚಾರವಾಗಿ ದೂರು ದಾಖಲಿಸಿಕೊಳ್ಳುವವರೆಗೂ ನಾನು ಪ್ರತಿಕ್ರಿಯೆ ನೀಡಿರಲಿಲ್ಲ. ಸ್ಥಳೀಯವಾಗಿ ನಮ್ಮ ನಾಯಕರು ಅಲ್ಲಿ ಕಾರ್ಯಪ್ರವೃತ್ತರಾಗಿ ನಮಗೆ ನಿರಂತರವಾಗಿ ಮಾಹಿತಿ ನೀಡಿದ್ದಾರೆ ಎಂದರು.
ಈ ಕೊಲೆಗೆ ಕಾರಣರಾದ ವ್ಯಕ್ತಿ ಬಿಜೆಪಿ ನಾಯಕರಿಗೆ ಆಪ್ತನಾಗಿದ್ದು, ಈ ನೈತಿಕ ಪೊಲೀಸ್ ಗಿರಿಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರನ್ನು ಹೊಣೆ ಮಾಡುತ್ತೇನೆ. ಕಾರಣ ಅವರು ಈ ಹಿಂದೆ ನೈತಿಕ ಪೊಲೀಸ್ ಗಿರಿಗೆ ಅವರು ಬೆಂಬಲ ನೀಡಿದ್ದರು. ರೈತ ಜಾನುವಾರುಗಳನ್ನು ಸಂತೆಯಲ್ಲಿ ಖರೀದಿಸಿದ ರಸೀದಿ ಇದ್ದರೂ ಅವನಿಗೆ 2 ಲಕ್ಷ ಹಣದ ಬೇಡಿಕೆ ಇಟ್ಟು, ಹತ್ಯೆ ಮಾಡಿದ್ದಾರೆ. ಈ ಕೊಲೆಗೆ ಸರ್ಕಾರವೇ ಕಾರಣ. ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅಲ್ಪಸಂಖ್ಯಾತರು ಬದುಕಲು ಅವಕಾಶ ಮಾಡಿಕೊಡಬೇಕು. ಚುನಾವಣೆ ಸಮಯದಲ್ಲಿ ಇಂತಹ ಗೊಂದಲ ಮಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತೇನೆ. ಈ ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಬೇಕು. ಅವರನ್ನು ಬಂಧಿಸದೇ ಅವರನ್ನು ರಕ್ಷಣೆ ಮಾಡಿದರೆ, ಇದಕ್ಕೆ ಅಧಿಕಾರಿಗಳು ಜವಾಬ್ದಾರಿಯಾಗಲಿದ್ದಾರೆ. ಹತ್ಯೆ ಮಾಡಿರುವವರು ನಿಮ್ಮ ಕಾರ್ಯಕರ್ತನೋ, ಆತ್ಮೀಯನೋ ಅವನನ್ನು ಕೂಡಲೇ ಬಂಧಿಸಬೇಕು ಎಂದರು.