ಬೆಂಗಳೂರು : ಎಐಸಿಸಿ ಆದ್ಯಕ್ಷೆ ಸೋನಿಯಾಗಾಂಧಿ ಅವರನ್ನು ಇತ್ತೀಚೆಗೆ ಭೇಟಿಯಾದಾಗ ರಾಷ್ಟ್ರ ರಾಜಕಾರಣದ ವಿಷಯ ಚರ್ಚೆಗೇ ಬಂದಿಲ್ಲ. ಆದರೂ ಕೆಲ ಪತ್ರಿಕೆಗಳಲ್ಲಿ ಕಲ್ಪಿತ ವರದಿಗಳು ಪ್ರಸಾರವಾಗುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಆಹ್ವಾನವನ್ನೇ ನೀಡಿಲ್ಲ. ಆ ವಿಷಯದ ಬಗ್ಗೆ ಸೋನಿಯಾ ಗಾಂಧಿ ಅವರು ಪ್ರಸ್ತಾಪವನ್ನೇ ಮಾಡಲಿಲ್ಲ. ಆದರೂ ಅವರಿಗೆ ಈ ವಿಷಯದ ಬಗ್ಗೆ ಬೇಜಾರಾಗಿದೆ ಎಂದರೆ ಯಾವ ರೀತಿ ಸ್ಪಷ್ಟನೆ ಕೊಡಬೇಕು? ಎಂದರು.
ಚರ್ಚೆಯಾಗಿದ್ದರೆ ತಾನೇ ಮನಸ್ತಾಪ ಮೂಡೋದು? ಇಷ್ಟು ಸ್ಪಷ್ಟವಾಗಿ ಹೇಳಿದ್ದರೂ ಪತ್ರಿಕೆಗಳಲ್ಲಿ ಈ ವಿಚಾರದ ಬಗ್ಗೆ ಕಲ್ಪಿತ ವರದಿಗಳು ಬರುತ್ತಿವೆ ಎಂದರೆ ಪತ್ರಿಕೆಗಳು ಪತ್ರಿಕಾ ಧರ್ಮವನ್ನು ಮರೆತಿವೆ ಎಂಬುದಾಗಿ ಹೇಳಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.