ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬಗ್ಗೆ ಎಲ್ಲ ಸಚಿವರೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿದ್ದು, ಅಸಮಧಾನವಿಲ್ಲ. ಸರ್ಕಾರವನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಜನಪರ ಕೆಲಸ ಮಾಡಲು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಬಗ್ಗೆ ಪ್ರತಿಕ್ರಿಯೆ ನೀಡಿ , ಸ್ವಂತ ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಯ ಉಸ್ತುವಾರಿ ವಹಿಸುವುದು ನಮ್ಮ ಪಕ್ಷದ ರಾಷ್ಟ್ರೀಯ ನೀತಿ. ಈ ನಿರ್ಧಾರದ ಬಗ್ಗೆ ಯಾರಿಗೂ ಅಸಮಧಾನ ಇಲ್ಲ.ಈ ನಿಟ್ಟಿನಲ್ಲಿ ಎದ್ದಿರುವ ಊಹಾಪೋಹಗಳು ಸತ್ಯಕ್ಕೆ ದೂರವಾದುದಾಗಿದೆ ಎಂದು ತಿಳಿಸಿದರು.
ಪರಪ್ಪನ ಅಗ್ರಹಾರದಲ್ಲಿ ಅಪರಾಧಿಗಳು ಕಾನೂನು ಬಾಹಿರವಾಗಿ ಸೌಕರ್ಯಗಳನ್ನು ಪಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪರಪ್ಪನ ಅಗ್ರಹಾರದಲ್ಲಿನ ವಸ್ತುಸ್ಥಿತಿಯ ಬಗ್ಗೆ ವರದಿ ತರಿಸಿಕೊಂಡು , ಡಿಜಿ(ಕಾರಾಗೃಹ) ಅವರೊಂದಿಗೆ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ತಿಳಿಸಿದರು.
ಬಿಜೆಪಿಯವರು ಪಕ್ಷ ತೊರೆದು ವಲಸೆ ಬರಲು ಸಿದ್ಧರಿದ್ದಾರೆಂಬ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಪಕ್ಷಕ್ಕೆ ಅಭದ್ರತೆ ಕಾಡುತ್ತಿದ್ದೆ. ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರಿಬ್ಬರೂ ಕೇವಲ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಭಾಜಪ ಪಕ್ಷದಿಂದ ಯಾರೂ ವಲಸೆ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಬೇಡವೆಂದು ಭಾಜಪಕ್ಕೆ ಸೇರಿದವರು ಇದ್ದಾರೆ ಎಂದು ತಿಳಿಸಿದರು.
ರಾಜಕೀಯ ಬೆಳವಣಿಗೆಗಳ ಬಗ್ಗೆ ವ್ಯಾಖ್ಯಾನ ಬೇಡ. ಇದೆಲ್ಲದರ ಪರಿಣಾಮ ಸಧ್ಯದಲ್ಲಿಯೇ ಕಾಣಲಿದ್ದು, ಭಾಜಪ ಪಕ್ಷ ಇನ್ನಷ್ಟು ಬಲವರ್ಧನೆಗೊಳ್ಳಲಿದೆ ಎಂದು ತಿಳಿಸಿದರು.