ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನಪರಿಷತ್ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದರು.
ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಆದರೆ ಕೇವಲ ಬೆಂಗಳೂರು ಸಂಬಂಧಿತ ಮಸೂದೆಗಳನ್ನು ತರುತ್ತಿದ್ದಾರೆ. ಹೀಗಾದರೆ ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಸುವ ಅಗತ್ಯವಿಲ್ಲ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕಿದೆ. 8 ದಿನದ ಬದಲು 20 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಕಳೆದ ಸಲ ಕೊನೆಯ ಎರಡು-ಮೂರು ದಿನ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ಒಂದಷ್ಟು ಭರವಸೆಗಳನ್ನು ನೀಡಿದ್ದರು. ಅದನ್ನು ಇಂದಿಗೂ ಈಡೇರಿಸಿಲ್ಲ ಎಂದರು.
ತುಂಗಭದ್ರಾ ಜಲಾಶಯದ ಗೇಟ್ ದುರಸ್ತಿಯ 12 ಕೋಟಿ ರೂ. ಬಿಲ್ ಇನ್ನೂ ಪಾವತಿಸಿಲ್ಲ. ಇದರಿಂದಾಗಿ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿದ್ದಾರೆ. ಒಟ್ಟು 32 ಗೇಟ್ಗಳನ್ನು ಅಳವಡಿಸಬೇಕಿದೆ. ಎರಡನೇ ಬೆಳೆಗೆ ರೈತರಿಗೆ ನೀರು ದೊರೆಯುತ್ತಿಲ್ಲ. ಎಕರೆಗೆ 25,000 ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಈಗಿನ ಸನ್ನಿವೇಶ ನೋಡಿದರೆ ಮುಂದಿನ ವರ್ಷಕ್ಕೂ ನೀರು ಸಿಗುವುದಿಲ್ಲ ಎನ್ನಿಸಿದೆ. ಈ ಸರ್ಕಾರ ಉತ್ತರ ಕರ್ನಾಟಕದ ರೈತರಿಗೆ ಮೋಸ ಮಾಡಿದೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಿಲ್ಲ. ಮೆಕ್ಕೆಜೋಳದ ಖರೀದಿ ಕೇಂದ್ರ ಆರಂಭಿಸಿಲ್ಲ. ಈ ಎಲ್ಲ ವಿಷಯಗಳನ್ನು ಮೊದಲಿಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆ ಎರಡೂ ಸದನದಲ್ಲಿ ಚರ್ಚಿಸಲಾಗುವುದು ಎಂದರು.
ಬಡವರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಈ ಮೂಲಕ ಗ್ಯಾರಂಟಿಗಳನ್ನು ತಪ್ಪಿಸಬಹುದು ಎಂದು ಸರ್ಕಾರ ಅಂದುಕೊಂಡಿದೆ. ಬಿಜೆಪಿ ಇದ್ದಾಗ ಬಗರ್ಹುಕುಂ ಸಾಗುವಳಿಗೆ ಮಂಜೂರಾತಿ ನೀಡಲಾಗಿತ್ತು. ಕಾಂಗ್ರೆಸ್ ಬಂದ ನಂತರ ಈ ಕೆಲಸ ಆಗಿಲ್ಲ. ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಜೈಲುಗಳಲ್ಲಿ ಮದ್ಯ ತಯಾರಿ ಕೇಂದ್ರ ಆರಂಭವಾಗಿದೆ. ಭಯೋತ್ಪಾದಕ ಕೈದಿಗಳ ಕೈಗೆ ಮೊಬೈಲ್ ಬಂದಿದೆ. ಆದರೆ ಗೃಹಸಚಿವರು ಈ ವೀಡಿಯೋ ಸೋರಿಕೆ ಮಾಡಿದವರನ್ನು ಪತ್ತೆ ಮಾಡಲು ಪ್ರಯತ್ನಿಸಿದ್ದಾರೆ. ಇಷ್ಟು ದಿನ ಕಳ್ಳರು ದರೋಡೆ ಮಾಡುತ್ತಿದ್ದರೆ, ಈಗ ಪೊಲೀಸರೇ ದರೋಡೆಗೆ ಇಳಿದಿದ್ದಾರೆ. ಹಗಲಿನಲ್ಲೇ ರಾಜಧಾನಿಯಲ್ಲಿ 7 ಕೋಟಿ ರೂ. ದರೋಡೆಯಾಗಿದೆ ಎಂದರು.
ಸರ್ಕಾರಿ ಶಾಲೆಗಳ ದುಸ್ಥಿತಿ, ಶಿಕ್ಷಕರ ನೇಮಕ, ಬೆಂಗಳೂರಿನಲ್ಲಿ ಗುಂಡಿ ರಸ್ತೆಗಳಿಂದಾಗಿ ಜನರ ಮರಣ ಮೊದಲಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು. ಪೊಲೀಸ್ ಠಾಣೆಗಳಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸುತ್ತೇವೆ ಎಂದರು.





















































