ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao), ಕಳೆದ ಮಳೆಗಾಲದಲ್ಲಿ ಭಾರೀ ಹಾನಿಗೊಳಗಾದ ಪುತ್ತೂರು–ಬೆಳ್ತಂಗಡಿ ಸಂಪರ್ಕ ರಸ್ತೆವಾದ ಗುರುವಾಯನಕೆರೆ–ಉಪ್ಪಿನಂಗಡಿ (NH-118) ರಸ್ತೆಯ ಅಭಿವೃದ್ಧಿಗೆ ₹13 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷದ ಮಳೆಯಿಂದ ರಸ್ತೆ ಸಂಪೂರ್ಣ ಹಾಳಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿತ್ತು. ಸ್ಥಳ ಪರಿಶೀಲನೆ ನಡೆಸಿ ತುರ್ತು ಅಗತ್ಯ ಅರಿತು ಸಚಿವ ಸಂಪುಟಕ್ಕೆ ಶಿಫಾರಸು ಮಾಡಲಾಗಿದ್ದು, ಇದೀಗ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರಿಂದ ಕರಾವಳಿ ಭಾಗದ ಜನರಿಗೆ ಸುಗಮ ಸಂಚಾರ ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ, ರಾಜ್ಯದ ಬಡವರಿಗೆ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ₹81 ಕೋಟಿ ವೆಚ್ಚದಲ್ಲಿ 6 ಜಿಲ್ಲಾ ಆಸ್ಪತ್ರೆಗಳಿಗೆ ಹೈ-ಟೆಕ್ MRI ಯಂತ್ರಗಳನ್ನು ಒದಗಿಸಲು ಅನುಮೋದನೆ ನೀಡಲಾಗಿದೆ.
MRI ಸೌಲಭ್ಯ ಪಡೆಯುವ ಜಿಲ್ಲೆಗಳು:
- ದಾವಣಗೆರೆ
- ಮೈಸೂರು
- ಧಾರವಾಡ
- ಬಾಗಲಕೋಟೆ
- ಬೆಂಗಳೂರು ನಗರ
- ರಾಮನಗರ
ಈ ಕ್ರಮದಿಂದ ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಇನ್ನಷ್ಟು ಬಲಪಡಿಸುವುದರ ಜೊತೆಗೆ ಬಡಜನರಿಗೆ ಉಚಿತ ವೈದ್ಯಕೀಯ ಸೇವೆಗಳು ಸುಲಭವಾಗಿ ಲಭ್ಯವಾಗಲಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.



















































