ಬೆಂಗಳೂರು: ಕಾಂಗ್ರೆಸ್ ‘ಗ್ಯಾರಂಟಿ’ ಬಗ್ಗೆ ಟೀಕಿಸುತ್ತಿದ್ದ ಬಿಜೆಪಿಯವರೇ ಈಗ ಮೋದಿ ಗ್ಯಾರಂಟಿ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಕರ್ನಾಟಕದಲ್ಲಿ ಪ್ರಣಾಳಿಕೆ ಸಿದ್ಧಪಡಿಸುವಾಗಲೂ ಇದೇ ರೀತಿ ಎಲ್ಲರ ಅಬಿಪ್ರಾಯ ಸಂಗ್ರಹಿಸಲಾಗಿತ್ತು. ಅವುಗಳ ಆಧಾರದ ಮೇಲೆ, ಜನ ಸಾಮಾನ್ಯರಿಗೆ ನೆರವಾಗಲು 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು ಎಂದರು.
ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು ಈಗ ಮೋದಿ ಗ್ಯಾರಂಟಿ ಎಂದು ಹೇಳಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಆರ್ಥಿಕತೆ ಹಾಳಾಗಲಿದೆ ಎಂದು ಹೇಳುತ್ತಿದ್ದವರು ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ಪ್ರಕಟಿಸಿದರು. ನಾವು ನಮ್ಮ ಜನರ ಬದುಕಿನಲ್ಲಿ ಬದಲಾವಣೆ ತರುವುದು ಮುಖ್ಯ. ನಮ್ಮ ಯೋಜನೆಗಳಿಂದ ವಿದ್ಯುತ್ ಬಿಲ್ ನಲ್ಲಿ 1500, ಗೃಹಲಕ್ಷ್ಮಿ ಯೋಜನೆಯಲ್ಲಿ 2000, ಶಕ್ತಿ ಯೋಜನೆಯಲ್ಲಿ 3000 ಹಣ ಉಳಿಯುತ್ತದೆ. ನಮ್ಮ ಐದು ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ಸುಮಾರು 5-6 ಸಾವಿರ ಪ್ರತಿ ತಿಂಗಳು ಉಳಿತಾಯವಾಗಲಿದೆ ಎಂದರು.
ನಮ್ಮ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವಾಸ್ತವಾಂಶಕ್ಕೆ ಹತ್ತಿರವಾಗುವಂತೆ ಸಲಹೆ ನೀಡಬೇಕು. ಇಂದು ನಮಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತುತ್ತಿದ್ದೇವೆ. ನಾವು ಲೆಕ್ಕಾಚಾರ ಹಾಕಲು ಆರಂಭಿಸಿದ ನಂತರ ಬೇರೆ ರಾಜ್ಯಗಳು ತಮಗಾಗಿರುವ ಅನ್ಯಾಯ ಪ್ರಶ್ನಿಸುತ್ತಿದ್ದಾರೆ. ನಿರ್ಮಲಾ ಸೀತರಾಮನ್ ಅವರು ಹಣಕಾಸು ಆಯೋಗದ ಕಡೆ ಬೆಟ್ಟು ಮಾಡಿ ತೋರುತ್ತಿದ್ದಾರೆ. ಹಣಕಾಸು ಆಯೋಗ ಬಜೆಟ್ ಮಂಡನೆ ಮಾಡುವುದಿಲ್ಲ ಅಲ್ಲವೇ? ಸರ್ಕಾರ ಬಜೆಟ್ ಮಂಡನೆ ಮಾಡುವಾಗ, ರಾಜ್ಯಕ್ಕೆ ಆಗುವ ಅನ್ಯಾಯ ಸರಿಪಡಿಸಬಹುದಲ್ಲವೇ? ಎಂದು ಡಿಕೆಶಿ ಪ್ರಶ್ನಿಸಿದರು.
ನಮ್ಮ ರಾಜ್ಯದಲ್ಲಿ ನಾಗ್ಪುರ ಶಿಕ್ಷಣ ನೀತಿಯನ್ನು ತೆಗೆದುಹಾಕಲು ಮುಂದಾಗಿದ್ದೇವೆ. ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಬಿಜೆಪಿ ಸ್ನೇಹಿತರ ಬಳಿಯೇ ನಾನು ಚರ್ಚೆ ಮಾಡಿದ್ದೇನೆ. ಈ ಎನ್ಇಪಿ ಜಾರಿ ಅಸಾಧ್ಯ ಎಂದು ಅವರೇ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿ ರಾಜ್ಯಗಳಲ್ಲಿ ಜಾರಿ ಮಾಡಲಾಗದನ್ನು ನಮ್ಮ ರಾಜ್ಯದಲ್ಲಿ ಆತುರದಲ್ಲಿ ಜಾರಿ ಮಾಡಲು ಮುಂದಾದರು. ಇದನ್ನು ಸರಿಪಡಿಸಲು ಸಮಿತಿ ರಚಿಸಲಾಗಿದೆ. ಇದೆಲ್ಲದರ ಜವಾಬ್ದಾರಿಯನ್ನು ಸಚಿವ ಸುಧಾಕರ್ ಅವರ ಹೆಗಲಿಗೆ ನೀಡಲಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆ ವಿಶ್ವದಾದ್ಯಂತ ಪ್ರಶಂಸೆ ಪಡೆದಿದೆ. ಈ ಕಾರಣಕ್ಕೆ ಪ್ರಪಂಚದ ಪ್ರಮುಖ 500 ಕಂಪನಿಗಳಲ್ಲಿ ಭಾರತೀಯರೇ ಹೆಚ್ಚು ನಿಯಂತ್ರಣ ಹೊಂದಿದ್ದಾರೆ ಎಂದು ಡಿಕೆಶಿ ಹೇಳಿದರು.


























































