ಬೆಂಗಳೂರು: ಮಾನವೀಯತೆ ಇಲ್ಲದ ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎನ್ನುವ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರಿಗೂ ಈ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಬೇರೆ ದೇಶಗಳಿಂದ ಬಂದ ಅಲ್ಪಸಂಖ್ಯಾತರು ಪಾದಚಾರಿ ಮಾರ್ಗದಲ್ಲಿ ಬದುಕುತ್ತಿದ್ದು, ಆಶ್ರಯ ಕಳೆದುಕೊಂಡಿದ್ದಾರೆ. ಮಾನವೀಯತೆ ಇಲ್ಲದ ಕಾಂಗ್ರೆಸ್ಸಿಗರು *ಕಾಮಾಲೆ ಕಣ್ಣಿನಿಂದ* ಎಲ್ಲವನ್ನೂ ನೋಡುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಈ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಿಲ್ಲ ಎಂದರು.
ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಈ ಸಣ್ಣ ಸಮಸ್ಯೆಯನ್ನು ಪರಿಹರಿಸಲು ಕೂಡ ಸರ್ಕಾರಕ್ಕೆ ಯೋಗ್ಯತೆಯಿಲ್ಲ. ಕಾವೇರಿ ಟ್ರಿಬ್ಯುನಲ್ನಲ್ಲಿ ಸರಿಯಾಗಿ ವಾದಿಸಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ. ತಮಿಳುನಾಡಿನ ಆತ್ಮೀಯ ಸ್ನೇಹಿತರಾದ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಟಿಕೆಟ್ಗಾಗಿ ಕಾವೇರಿಯನ್ನು ನೀಡಿದ್ದಾರೆ. ಬೆಂಗಳೂರು, ಮಂಡ್ಯದಲ್ಲಿ ನೀರಿನ ಕೊರತೆಗೆ ಕಾಂಗ್ರೆಸ್ಸೇ ನೇರ ಕಾರಣ. ಜನರು ವಲಸೆ ಹೋಗಲು, ಬೀದಿಗೆ ಬರಲು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಅಪಕೀರ್ತಿ ತರಲು ಕಾಂಗ್ರೆಸ್ ಸರ್ಕಾರವೇ ಕಾರಣ. ಲೋಕಸಭಾ ಚುನಾವಣೆಯಲ್ಲಿ ಜನರು ಈ ದುರಾಡಳಿತಕ್ಕೆ ತಿಲಾಂಜಲಿ ನೀಡಬೇಕು ಎಂದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದು ಎಂಬಂತೆ ಬಿಂಬಿಸಿಕೊಳ್ಳುವಷ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಗೆಟ್ಟಿದ್ದಾರೆ. ಕೇಂದ್ರದಿಂದ ಅನುದಾನ ಸಿಗುವ ಯೋಜನೆಗಳ ಜಾಹೀರಾತಿಗೆ ಪ್ರಧಾನಿಯವರ ಚಿತ್ರವನ್ನೂ ಹಾಕಬೇಕು ಎಂದು ಆಗ್ರಹಿಸಿದರು.






















































