ದಾವಣಗೆರೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಪ್ರತಿಕ್ರಿಯೆ ನೀಡಿದ್ದಾರೆ. ಈ ಉಪಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಲು ಸಾಧ್ಯವಾಗಿಲ್ಲವೆಂದು ಅವರು ಒಪ್ಪಿಕೊಂಡಿದ್ದಾರೆ.
ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜವೆಂದು ಹೇಳಿದ ವಿಜಯೇಂದ್ರ, ಕಾಂಗ್ರೆಸ್ (Congress) ಅಭ್ಯರ್ಥಿಗಳಿಗೆ ಅನುಕಂಪವೂ ಜೊತೆಗೆ ಸರ್ಕಾರದ ವ್ಯವಸ್ಥೆಗಳು, ಮುಖ್ಯಮಂತ್ರಿಗಳು ಹಾಗೂ ಸಚಿವರ ವ್ಯಾಪಕ ಪ್ರಚಾರ ಫಲಿತಾಂಶದ ಮೇಲೆ ಪ್ರಭಾವ ಬೀರಿದೆ ಎಂದು ವಿಶ್ಲೇಷಿಸಿದರು.
ಹಿಂದೆ ಬಿ.ಎಸ್. ಯಡಿಯೂರಪ್ಪ (B.S. Yediyurappa) ಮುಖ್ಯಮಂತ್ರಿಯಾಗಿದ್ದ ವೇಳೆ 17 ಉಪಚುನಾವಣೆಗಳಲ್ಲಿ 15 ಕ್ಷೇತ್ರಗಳನ್ನು ಬಿಜೆಪಿ ಗೆದ್ದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಈ ಬಾರಿ ಕೂಡ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಇತ್ತು ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ್ ಕರಿಯಪ್ಪ (Srinivasadas Kariyappa) ಗೆಲುವಿನ ನಿರೀಕ್ಷೆ ಇತ್ತು. ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಹಗಲು-ರಾತ್ರಿ ಶ್ರಮಿಸಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಮತಗಳು ಬಂದಿಲ್ಲವೆಂದು ಅವರು ತಿಳಿಸಿದ್ದಾರೆ. ಸುಮಾರು 64,000 ಮತಗಳನ್ನು ಪಡೆದಿದ್ದು, 70,000 ಮತಗಳ ಗುರಿ ಇತ್ತು ಎಂದರು.
ಇನ್ನೂ ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿ (Bharatiya Janata Party) ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸವನ್ನು ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.




















































