ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿದ್ಯಾರಣ್ಯಪುರ ಬಳಿ ಜೈಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ವಿಚಾರಣೆಗೆ ಗುರಿಪಡಿಸಿರುವ ಪೊಲೀಸರು ಆರೋಪಿಗಳ ಉದ್ದೇಶದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.
ಇದೇ ವೇಳೆ, ವಿದ್ಯಾರಣ್ಯಪುರ ಪೊಲೀಸ್ ಠಾಣೆಗೆ ಭೇಟಿ ನೀಡಿರುವ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್ ಕೂಡಾ ಆರೋಪಿಗಳನ್ನು ವಿಚಾರಣೆ ಮಾಡಿದ್ದಾರೆ.
ಈ ನಡುವೆ, ಘಟನೆ ಬಗ್ಗೆ ಪೊಲೀಸರ ಮುಂದೆ ಹೇಳಿಕೊಂಡಿರುವ ಆರೋಪಿಗಳು, ಬುಧವಾರ ಮಧ್ಯಾಹ್ನ 3 ಗಂಟೆಗೆ ತಾವು ಬೈಕ್ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿದ್ದ ಯುವಕರು ಬಂದು ನಮ್ಮ ಬಳಿ ವಾಹನ ನಿಲ್ಲಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಜೊತೆಗೆ ನಮಗೂ ಜೈ ಶ್ರೀರಾಮ್ ಕೂಗುವಂತೆ ಹೇಳಿದ್ದಾರೆ. ಅದಕ್ಕೆ ನಾವು ನೀವೇ ಅಲ್ಲಾಹು ಅಕ್ಬರ್ ಅಂತಾ ಕೂಗಿ ಎಂದೆವು. ಆ ವೇಳೆ ಮಾತಿಗೆ ಮಾತು ಬೆಳೆದಿದೆ. ಈ ವಿಚಾರದಲ್ಲಿ ಯಾವುದೇ ಬೇರೆ ಉದ್ದೇಶ ಇರಲಿಲ್ಲ ಎಂದು ಆರೋಪಿಗಳು ಹೇಳಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.