ನವದೆಹಲಿ: ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸಿದ್ದ ಪ್ರತಿಭಟನೆಯ ವೇಳೆ ಮಧ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ಹಿಂದೆ ಕಾಣದ ಕೈಗಳಿರುವ ಶಂಕೆಯನ್ನು ದೆಹಲಿ ಪೊಲೀಸರು ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ.
ಸೋಮವಾರ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳು ರೀಗಲ್ ಸಿನಿಮಾ ಮಂದಿರದ ಸಮೀಪ ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿ, ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಪೂರ್ವಯೋಜಿತವಾಗಿತ್ತೇ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಜಂತರ್ ಮಂತರ್ಗೆ ಬಂದಿದ್ದ ಪ್ರತಿಭಟನಾಕಾರರ ಚಟುವಟಿಕೆಗಳನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು 200ಕ್ಕೂ ಹೆಚ್ಚು ವಿಡಿಯೊಗಳು, ಸಿಸಿಟಿವಿ ದೃಶ್ಯಗಳು, ಡ್ರೋನ್ ಕ್ಯಾಮೆರಾ, ಮೊಬೈಲ್ ಫೋನ್ ದಾಖಲೆಗಳು ಹಾಗೂ ಪೊಲೀಸ್ ಬಾಡಿ-ವೋನ್ ಕ್ಯಾಮೆರಾ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಇದಲ್ಲದೆ, ಗುರುತಿಸಲಾದ ಶಂಕಿತರ ವಿರುದ್ಧ ಹಿಂದಿನ ಅಪರಾಧ ಪ್ರಕರಣಗಳಿವೆಯೇ ಎಂಬ ಮಾಹಿತಿಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ತನಿಖೆಯ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.







































































