ಬೆಂಗಳೂರು: ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಗಾರರೊಂದಿಗೆ ಮಾತಾಡಿದ ಅವರು ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು.
ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, “ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ತಿಳಿಸಿದರು.
ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂದು ಕೇಳಿದಾಗ, “ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ” ಎಂದು ಡಿಕೆಶೊ ತಿಳಿಸಿದರು.