ಬೆಂಗಳೂರು: ಈ ದೇಶದಲ್ಲಿ ಇಡಿ, ಸಿಬಿಐ, ಆದಾಯ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು, ವಿರೋಧ ಪಕ್ಷಗಳ ನಾಯಕರ ಬಾಯಿ ಮುಚ್ಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಗುರಿಪಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂವಿಧಾನಿಕ ಸಂಸ್ಥೆಗಳು ಇರುವುದೇ ವಿರೋಧ ಪಕ್ಷಗಳ ಮೇಲೆ ದಾಳಿ ಮಾಡಲು. ಬಿಜೆಪಿಯ ಯಾವುದೇ ನಾಯಕರ ಮೇಲೆ ಇಡಿ ದಾಳಿ ಮಾಡಿಲ್ಲ, ಬಂಧಿಸಿಲ್ಲ ಎಂದು ದೂರಿದರು.
ಸೋನಿಯಾ ಗಾಂಧಿ ಅವರು ಇಡಿ ಕಚೇರಿಯಲ್ಲಿ ವಿಚಾರಣೆ ಎದುರಿಸಿದ್ದು, ದೇಶದ ಎಲ್ಲ ಕಾಂಗ್ರೆಸಿಗರು ಅವರಿಗೆ ಧೈರ್ಯ ತುಂಬುವ ಪ್ರಯಮಾಡಿದ್ದೇವೆ. ರಾಹುಲ್ ಗಾಂಧಿ ಅವರನ್ನು 50 ಗಂಟೆಗಳ ಕಾಲ, ಸೋನಿಯಾ ಗಾಂಧಿ ಅವರನ್ನು ಮೊನ್ನೆ 3 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರೂ, ಅನಗತ್ಯ ಕಿರುಕುಳ ನಿಂತಿಲ್ಲ ಎಂದು ಡಿಕೆಶಿ ಆರೋಪಿಸಿದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕಾಂಗ್ರೆಸ್ ಮುಖವಾಣಿಯಾಗಿದ್ದು, ನೆಹರೂ ಅವರು ಅಧ್ಯಕ್ಷರಾಗಿದ್ದಾಗ ಇದನ್ನು ಆರಂಭಿಸಿದ್ದರು. ಈ ಸಂಸ್ಥೆಯ ಆಸ್ತಿಯನ್ನು ತಮ್ಮ ಸ್ವಂತ ಆಸ್ತಿ ಎಂದು ಎಲ್ಲಿಯೂ ಹೇಳಿಲ್ಲ. ಆ ಪತ್ರಿಕೆ ಸಂಕಷ್ಟದಲ್ಲಿದ್ದಾಗ ಅಲ್ಲಿನ ಸಿಬ್ಬಂದಿಗೆ ವೇತನ ನೀಡಲು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ದೇಣಿಗೆ ರೂಪದಲ್ಲಿ ಹಣ ನೀಡಿದ್ದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಗೂ ಅರುಣ್ ಜೇಟ್ಲಿ ಅವರೇ ಈ ಪ್ರಕರಣದಲ್ಲಿ ಯಾವುದೇ ಅಕ್ರಮ ಇಲ್ಲ ಎಂದು ಹೇಳಿದ್ದರು. ಆದರೂ ಈಗ ಈ ಪ್ರಕರಣ ಮತ್ತೆ ತೆರೆದಿದ್ದಾರೆ ಎಂದವರು ದೂರಿದರು.
ನನ್ನನ್ನು, ಚಿದಂಬರಂ, ಮಹಾರಾಷ್ಟ್ರ ನಾಯಕರು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರನ್ನು ವಿಚಾರಣೆ ಮಾಡಿದ್ದಾರೆ. ಈಗ ಸೋನಿಯಾ ಗಾಂಧಿ ಅವರನ್ನು ಅನಗತ್ಯವಾಗಿ ವಿಚಾರಣೆ ಮಾಡುತ್ತಿದ್ದಾರೆ. ಅವರು ಏನೇ ಕಿರುಕುಳ ಕೊಟ್ಟರೂ, ಜೈಲಿಗೆ ಹಾಕಿದರೂ ನಾವು ಜಗ್ಗುವುದಿಲ್ಲ. ನೆಹರೂ ಹಾಗೂ ಗಾಂಧೀಜಿ, ಸರ್ದಾರ್ ಪಟೇಲ್ ಅವರು ದೇಶಕ್ಕಾಗಿ ಹಲವು ವರ್ಷಗಳ ಕಾಲ ಜೈಲುವಾಸ ಅನುಭವಿಸಿ, ಜೀವವನ್ನು ಲೆಕ್ಕಿಸದೆ ಬ್ರಿಟೀಷರ ಗುಂಡಿಗೆ ಎದೆಯೊಡ್ಡಿ ನಿಂತಿದ್ದರು. ದೇಶದ ಹಿತಕ್ಕೆ 10 ವರ್ಷಗಳ ಕಾಲ ಪ್ರಧಾನಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದ ಸೋನಿಯಾ ಗಾಂಧಿ ಅವರಿಗೆ ಈ ರೀತಿ ಕಿರುಕುಳ ನೀಡುತ್ತಿದ್ದಾರೆ. ಅವರ ಕುಟುಂಬದವರು ಅಲಹಾಬಾದ್ ನಲ್ಲಿ 20 ಸಾವಿರ ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ದಾನ ಮಾಡಿದ್ದಾರೆ. ಇಂದು ನಾವೆಲ್ಲ ಅವರ ಜತೆ ಇದ್ದೇವೆ ಎಂದವರು ಹೇಳಿದರು.


























































