ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಮೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧ ಗುಲಾಬಿ ಬೆಳಕಿನಿಂದ ಕಂಗೊಳಿಸುತ್ತಿದೆ. ಮಹಿಳಾ ಸಬಲೀಕರಣದ ಸಂದೇಶ ಸಾರುವ ಈ ವಿಶೇಷ ಅಲಂಕಾರ ಗಮನಸೆಳೆಯುತ್ತಿದೆ.
ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ 1.2 ಕೋಟಿಗೂ ಹೆಚ್ಚು ಕುಟುಂಬಗಳ ಒಡತಿಯರಿಗೆ ಆರ್ಥಿಕ ನೆರವಿನ ಜತೆಗೆ ಸ್ವಾಭಿಮಾನ ಮತ್ತು ಆತ್ಮಸ್ಥೈರ್ಯವೂ ಹೆಚ್ಚಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ‘‘ಗೃಹಲಕ್ಷ್ಮಿ ಕೇವಲ ಸರ್ಕಾರಿ ಸೌಲಭ್ಯವಲ್ಲ. ಮಹಿಳೆಯರ ನೆಮ್ಮದಿಯ ಬದುಕಿಗೆ ಸರ್ಕಾರ ನೀಡುತ್ತಿರುವ ಪ್ರೀತಿಯ ಆಸರೆ’’ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶಿವಕುಮಾರ್ ಮನವಿಯೊಂದನ್ನೂ ಮಾಡಿದ್ದಾರೆ. ಸರ್ಕಾರದ ‘ಗ್ಯಾರಂಟಿ ಸಮಿತಿ’ ಸದಸ್ಯರು ಮನೆ ಬಾಗಿಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಎಂದಿನಂತೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಯೋಜನೆ ಮತ್ತಷ್ಟು ಬಲ ನೀಡಲಿದೆ ಎಂಬ ಸಂದೇಶವನ್ನು ಸುವರ್ಣಸೌಧದ ಗುಲಾಬಿ ಬೆಳಕಿನ ಅಲಂಕಾರವೂ ಸಾರುತ್ತಿದೆ.







































































