ಬೆಂಗಳೂರು: ಏಪ್ರಿಲ್ 29ರಂದು ಸುರಿದ ಭೀಕರ ಆಲಿಕಲ್ಲು ಮಳೆ ಹಾಗೂ ಗಾಳಿ-ಮಳೆಯಿಂದ ರಕ್ಷಣೆ ಪಡೆಯಲು ಬೌರಿಂಗ್ ಆಸ್ಪತ್ರೆ ಹಳೆಯ ಕಾಂಪೌಂಡ್ ಗೋಡೆಯ ಬಳಿ ನಿಂತಿದ್ದ ಪಾದಚಾರಿಗಳು ಮತ್ತು ವ್ಯಾಪಾರಿಗಳ ಮೇಲೆ ಗೋಡೆ ಏಕಾಏಕಿ ಕುಸಿದುಬಿದ್ದ ದುರಂತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದರು.
ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ₹5 ಲಕ್ಷ ಹಾಗೂ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.
ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಲೋಕಾಯುಕ್ತರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.
ಸ್ಥಳ ಪರಿಶೀಲನೆಯ ಬಳಿಕ ಮಾತನಾಡಿದ ಅವರು, “ಕಾಂಪೌಂಡ್ ಗೋಡೆಯ ಅಡಿಪಾಯವೇ ದುರ್ಬಲವಾಗಿತ್ತು. ನಗರದಲ್ಲಿ ಮಳೆಯ ಸಾಧ್ಯತೆ ತಿಳಿದಿದ್ದರೂ ಇಂತಹ ಅಪಾಯಕರ ಸ್ಥಳಗಳಲ್ಲಿ ವ್ಯಾಪಾರಿಗಳಿಗೆ ಅವಕಾಶ ನೀಡಿರುವುದು ಅಧಿಕಾರಿಗಳ ಬೇಜವಾಬ್ದಾರಿ,” ಎಂದು ಹೇಳಿದ್ದಾರೆ.
“ಕೇವಲ ಒಂದು ಗಂಟೆಯ ಮಳೆಯಲ್ಲೇ ಗೋಡೆ ಕುಸಿಯುತ್ತದೆ ಎಂದರೆ ಕಾಮಗಾರಿಯ ಗುಣಮಟ್ಟ ಹೇಗಿರಬಹುದು?” ಎಂದು ಪ್ರಶ್ನಿಸಿದ ಅವರು, ಘಟನೆಗೆ ಕಾರಣವಾದ ನಿರ್ಲಕ್ಷ್ಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಕೆಳಹಂತದ ಸಿಬ್ಬಂದಿಯಷ್ಟೇ ಅಲ್ಲದೆ, ಉನ್ನತ ಮಟ್ಟದ ಅಧಿಕಾರಿಗಳನ್ನೂ ಹೊಣೆಗಾರರನ್ನಾಗಿ ಮಾಡಲು ಲೋಕಾಯುಕ್ತರು ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.




















































