ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್ನ ಮಾಜಿ ಶಾಸಕ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ರಾಂಪುರ್ಹತ್ನಲ್ಲಿರುವ ತಮ್ಮ ಪಕ್ಷದ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳದಿಂದ ಒಂದು ಪುಟದ ಕೈಬರಹದ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಿರ್ಭುಮ್ ಜಿಲ್ಲೆಯ ರಾಂಪುರ್ಹತ್ ಕ್ಷೇತ್ರದಿಂದ ಐದು ಬಾರಿ ಟಿಎಂಸಿ ಶಾಸಕರಾಗಿ ಆಯ್ಕೆಯಾಗಿದ್ದ ಬ್ಯಾನರ್ಜಿ, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಆತ್ಮಹತ್ಯೆ ಪತ್ರದಲ್ಲಿ ರಾಜಕೀಯ ಪ್ರವೇಶಿಸಿರುವುದು ತಪ್ಪು ನಿರ್ಧಾರವಾಗಿತ್ತು ಎಂದು ಅವರು ಬರೆದಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಅಥವಾ ಯಾವುದೇ ಕೆಲಸಕ್ಕಾಗಿ ಹಣ ಪಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ.

ತಾರಾಪೀಠ–ರಾಂಪುರ್ಹತ್ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಟಿಆರ್ಡಿಎ) ತಮ್ಮ ಅಧಿಕಾರಗಳನ್ನು ಕಸಿದುಕೊಳ್ಳಲಾಗಿತ್ತು ಮತ್ತು ತಮ್ಮನ್ನು ಕೀಳಾಗಿ ಕಾಣಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. ರಾಜಕೀಯ ಪ್ರವೇಶಿಸದಂತೆ ತಮ್ಮ ಪುತ್ರರಿಗೆ ಸಲಹೆ ನೀಡಿರುವುದಾಗಿಯೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಂಪುರ್ಹತ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬ್ಯಾನರ್ಜಿ ಸುಮಾರು 24 ಸಾವಿರ ಮತಗಳ ಅಂತರದಿಂದ ಸೋತಿದ್ದರು. ಬಳಿಕ ಪಕ್ಷದ ನಾಯಕತ್ವದಿಂದ ಬಹುತೇಕ ದೂರವಾಗಿದ್ದರು ಎನ್ನಲಾಗಿದೆ.
ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪತ್ತೆಯಾಗಿರುವ ಆತ್ಮಹತ್ಯೆ ಪತ್ರವನ್ನು ಬ್ಯಾನರ್ಜಿ ಅವರೇ ಬರೆದಿದ್ದಾರೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಅವರ ಸಾವಿಗೆ ರಾಜಕೀಯ ಒತ್ತಡವೇ ಕಾರಣವೇ ಅಥವಾ ಬೇರೆ ಕಾರಣಗಳಿವೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.







































































