ದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಸಮಾಜವಾದಿ ಪಕ್ಷದ ಮೂಲಗಳು ತಿಳಿಸಿವೆ.
ಹಿರಿಯ ನಾಯಕ ಮುಲಯಾಂ ಸಿಂಗ್ ಯಾದವ್ ಅವರ ನಿಧನಕ್ಕೆ ನಾಯಕರನೇಕರು ಕಂಬನಿ ಮಿಡಿದಿದ್ದಾರೆ. ಮುಲಾಯಾಂ ಯಾದವ್ ನಿಧನಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಮ್ ಮನೋಹರ್ ಲೋಹಿಯಾ, ರಾಜ್ ನಾರಾಯಣ್ ಅವರಂಥ ನಾಯಕರ ಮಾರ್ಗದರ್ಶನದಲ್ಲಿ ಮುನ್ನೆಲೆಗೆ ಬಂದ ಮುಲಾಯಂ ಸಿಂಗ್ ಅವರು ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದ್ದರು. ಸಮಾಜವಾದಿ ಪಕ್ಷವನ್ನು ಸ್ಥಾಪಿಸಿ, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮುಲಾಯಂ ಸಿಂಗ್ ಅವರು ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಷ್ಟ್ರವು ಮುತ್ಸದ್ದಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.
ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.



















































