ಚೆನ್ನೈ: ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆ ವಿರೋಧಿಸಿ ಡಿಎಂಕೆ ಸಂಸತ್ತಿನಲ್ಲಿ ಹೋರಾಟ ತೀವ್ರಗೊಳಿಸಿದ್ದು, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಸಲ್ಲಿಸಿ ವಿಷಯದ ಕುರಿತು ತಕ್ಷಣ ಚರ್ಚೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ತುರ್ತು ಸಾರ್ವಜನಿಕ ಮಹತ್ವದ ವಿಚಾರವಾಗಿ ಪರಿಗಣಿಸಿ, ಇತರ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಡಿಎಂಕೆ ಆಗ್ರಹಿಸಿದೆ.
ಕಾವೇರಿ ಜಲ ವಿವಾದ ನ್ಯಾಯಮಂಡಳಿ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಎಂಕೆ ಪುನರುಚ್ಚರಿಸಿದೆ. ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆಯನ್ನು ಮುಂದುವರಿಸಬಾರದು ಎಂದು ಪಕ್ಷವು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಆಗ್ರಹಿಸಿದೆ.

ಲೋಕಸಭೆಯಲ್ಲಿ ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿ.ಆರ್. ಬಾಲು ಸ್ಪೀಕರ್ಗೆ ಸಲ್ಲಿಸಿದ ನೋಟಿಸ್ನಲ್ಲಿ, ಕರ್ನಾಟಕವು ಏಕಪಕ್ಷೀಯವಾಗಿ ಮೇಕೆದಾಟು ಯೋಜನೆಯನ್ನು ಮುಂದುವರಿಸಿದರೆ ತಮಿಳುನಾಡಿನ ನೀರಿನ ಹಕ್ಕುಗಳಿಗೆ ಧಕ್ಕೆ ಉಂಟಾಗಲಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ ಕಾವೇರಿ ನೀರಿನ ಮೇಲೆ ಅವಲಂಬಿತವಾಗಿರುವ ಡೆಲ್ಟಾ ಭಾಗದ ರೈತರ ಜೀವನೋಪಾಯಕ್ಕೆ ಇದು ಗಂಭೀರ ಪರಿಣಾಮ ಬೀರಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ರಾಜ್ಯಸಭೆಯಲ್ಲಿ ಡಿಎಂಕೆ ನಾಯಕ ತಿರುಚಿ ಶಿವ ಕೂಡ ಇದೇ ವಿಷಯವಾಗಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಯೋಜನೆಯ ಕಾನೂನು, ಪರಿಸರ ಹಾಗೂ ಕೃಷಿ ಸಂಬಂಧಿತ ಪರಿಣಾಮಗಳ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸುವಂತೆ ಒತ್ತಾಯಿಸಿದ್ದಾರೆ.






































































