ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಘೋರ ಅನಾಹುತ ಸಂಭವಿಸಿದೆ. ಕಾಲೇಜಿನ ಕಟ್ಟಡದ ಮೇಲ್ಛಾವಣಿ ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.
ಮೃತನನ್ನು 32 ವರ್ಷದ ಕಾರ್ಮಿಕ, ಮೊಹಮ್ಮದ್ ಸದ್ದಾಂ ಎಂದು ಗುರ್ತಿಸಲಾಗಿದೆ. ಈತ ಮೈಸೂರಿನ ಗೌಸಿಯಾ ನಗರದ ನಿವಾಸಿ ಎನ್ನಲಾಗಿದೆ.
ಸುಮಾರು 80 ವರ್ಷಗಳ ಹಳೆಯ ಕಟ್ಟಡದ ದುರಸ್ಥಿ ಕಾರ್ಯ ನಡೆಯುತ್ತಿರುವಾಗ ಮಂಗಳವಾರ ಸಂಜೆ ಕಟ್ಟಡದ ಮೇಲ್ಛಾವಣಿ ಕುಸಿದಿದೆ. ಆ ಸಂದರ್ಭದಲ್ಲಿ ಕಟ್ಟಡದಲ್ಲಿ 15 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನನ್ನ ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸುದೀರ್ಘ ಕಾರ್ಯಾಚರಣೆ ನಡೆಸಿದ್ದರು.







































































