ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.
2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇನ್ನೂ 2026-27ನೇ ಸಾಲಿನ ಬಜೆಟ್ನಲ್ಲಿ “ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ”ಯಡಿ ಮೂರು ವರ್ಷಗಳಿಗೆ ₹100 ಕೋಟಿ ಅನುದಾನ ಘೋಷಿಸಲಾಗಿದ್ದು, ಇದು ಗ್ರಾಮೀಣ ರೈತರ ಆದಾಯ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದರು.
ರಾಜ್ಯವು ವೈವಿಧ್ಯಮಯ ಹವಾಮಾನ ವಲಯಗಳನ್ನು ಹೊಂದಿದ್ದು, 49 ಕೃಷಿ ಉತ್ಪನ್ನಗಳಿಗೆ ಜಿಐ ಟ್ಯಾಗ್ ದೊರೆತಿದೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕರ್ನಾಟಕದ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗಿವೆ.
ಆಹಾರ ಸಂಸ್ಕರಣಾ ಕ್ಷೇತ್ರದಲ್ಲೂ ರಾಜ್ಯ ಮುಂಚೂಣಿಯಲ್ಲಿದ್ದು, 2020-2025 ಅವಧಿಯಲ್ಲಿ 6,500 ಘಟಕಗಳು ಸ್ಥಾಪನೆಯಾಗಿ ಸುಮಾರು 90,000 ಜನರಿಗೆ ಉದ್ಯೋಗ ದೊರಕಿದೆ ಎಂದು ಸಚಿವರು ತಿಳಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.





























































