ಬೆಂಗಳೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನಿವಾಸದ ಮುಂದೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಧರಣಿಯನ್ನು ಹತ್ತಿಕ್ಕಿ, ರಾಹುಲ್ ಗಾಂಧಿ ಅವರನ್ನು ಅಕ್ರಮವಾಗಿ ಬಂಧಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ದೇಶದ ಜನರ ಸಮಸ್ಯೆಗಳ ಪರ ಧ್ವನಿ ಎತ್ತಿದರೆ, ಭ್ರಷ್ಟಾಚಾರದ ವಿರುದ್ಧ ಪ್ರಶ್ನೆ ಮಾಡಿದರೆ ಬಂಧನವೇ? ಇದು ಯಾವ ನ್ಯಾಯ? ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಪೊಲೀಸ್ ಬಲವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ.
“ರಾಹುಲ್ ಗಾಂಧಿ ಅವರು ಈ ದೇಶದ ಬಡವರು, ರೈತರು, ನಿರುದ್ಯೋಗಿ ಯುವಕರ ಪರ ನಿರಂತರ ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ಹೆದರಿ ಕೇಂದ್ರ ಸರ್ಕಾರ ಈ ರೀತಿ ದಮನಕಾರಿ ನೀತಿ ಅನುಸರಿಸುತ್ತಿದೆ. ಆದರೆ ರಾಹುಲ್ ಗಾಂಧಿ ಅವರು ಜೈಲು, ಬಂಧನಗಳಿಗೆ ಹೆದರುವ ವ್ಯಕ್ತಿಯಲ್ಲ. ಜನರ ಸಮಸ್ಯೆಗಾಗಿ ಅವರು ಯಾವ ತ್ಯಾಗಕ್ಕೂ ಸಿದ್ಧರಿದ್ದಾರೆ” ಎಂದು ಚಲುವರಾಯಸ್ವಾಮಿ ಹೇಳಿದರು.

“ರಾಹುಲ್ ಗಾಂಧಿ ಅವರ ಬಂಧನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಸಾಧ್ಯವಿಲ್ಲ. ಬದಲಾಗಿ ನಮ್ಮ ಹೋರಾಟಕ್ಕೆ ಇನ್ನಷ್ಟು ಶಕ್ತಿ ಬಂದಿದೆ. ಕೇಂದ್ರ ಸರ್ಕಾರ ತಕ್ಷಣ ರಾಹುಲ್ ಗಾಂಧಿ ಅವರನ್ನು ಬೇಷರತ್ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ದೇಶಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
“ಸಂವಿಧಾನ ಬದ್ಧವಾಗಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಅದನ್ನು ಕಿತ್ತುಕೊಳ್ಳಲು ಯಾರಿಗೂ ಅಧಿಕಾರ ಇಲ್ಲ. ಮೋದಿ ಸರ್ಕಾರ ಜನರ ಸಮಸ್ಯೆಗೆ ಉತ್ತರ ಕೊಡುವ ಬದಲು, ಪ್ರಶ್ನೆ ಮಾಡುವವರ ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದೆ. ಇದನ್ನು ದೇಶದ ಜನ ಕ್ಷಮಿಸಲ್ಲ” ಎಂದು ಚಲುವರಾಯಸ್ವಾಮಿ ಕಿಡಿಕಾರಿದರು.
ರಾಹುಲ್ ಗಾಂಧಿ ಅವರ ಜೊತೆ ಬಂಧನಕ್ಕೊಳಗಾದ ಎಲ್ಲಾ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಚಲುವರಾಯಸ್ವಾಮಿ ಆಗ್ರಹಿಸಿದ್ದಾರೆ.







































































