ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಕಾಸಗಿ ಹೋಟೆಲ್ನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, 2006ರಲ್ಲಿ ಸಹ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಆಗಿತ್ತು. ಆದರೆ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಜೀ ಅವರ ಸಮ್ಮತಿ ಇರಲಿಲ್ಲ ಎಂದು ನೆನಪಿಸಿದರು. ಪ್ರಧಾನಿ ನರೇಂದ್ರ ಮೋದಿ ಜೀ ಅವರ ಜೊತೆಜೊತೆಗೇ ಮಾನ್ಯ ದೇವೇಗೌಡ ಜೀ ಅವರೂ ಈ ಬಾರಿ ಸಮ್ಮಿಲನಕ್ಕೆ ಆಶೀರ್ವಾದ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೀ ಅವರು ಈ ದೇಶದ ಅಭಿವೃದ್ಧಿ, ಭದ್ರತೆ ದೃಷ್ಟಿಯಿಂದ ನಮಗೆ ಆಶೀರ್ವಾದ ಮಾಡಿದ್ದು, ಇದರಿಂದ ಆನೆ ಬಲ ಬಂದಂತಾಗಿದೆ. ರಾಜ್ಯಕ್ಕೂ ಮುಂದಿನ ದಿನಗಳಲ್ಲಿ ಒಳಿತಾಗಲಿದೆ ಎಂದು ವಿಶ್ವಾಸದಿಂದ ನುಡಿದರು.
ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ಕೆಲಸ ಮಾಡಲು ಒಪ್ಪಿಕೊಂಡು ಹಲವು ತಿಂಗಳೇ ಕಳೆದಿದೆ. ನಾನು ಕೂಡ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆಗೆ ಮೈಸೂರು- ಕೊಡಗು, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಜಂಟಿ ಪ್ರವಾಸ ಮಾಡಿದ್ದೇನೆ. ಇದರ ಪರಿಣಾಮವಾಗಿ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ತಲುಪಿದೆ. ಕರ್ನಾಟಕದಲ್ಲಿ ಸಾಕಷ್ಟು ಹೊಂದಾಣಿಕೆ ರಾಜಕಾರಣ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್, ಜೆಡಿಎಸ್-ಕಾಂಗ್ರೆಸ್ ನಡುವೆ ಹಲವಾರು ಬಾರಿ ಹೊಂದಾಣಿಕೆ ಆಗಿದೆ. ಆದರೆ, ಈಗ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಗೆ ರಾಜ್ಯದ ಪ್ರಜ್ಞಾವಂತ ಮತದಾರರು ಸಂಪೂರ್ಣ ಆಶೀರ್ವಾದ ಕೊಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು.
ಮೈಸೂರು, ಮಂಡ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಗಮನಿಸಿದ್ದೇನೆ. ತಳಮಟ್ಟದಲ್ಲೂ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದ ಅವರು, ಈ ಚುನಾವಣೆಯಲ್ಲಿ ಎರಡೂ ಪಕ್ಷಗಳ ಮುಖಂಡರ ಜವಾಬ್ದಾರಿ ಹೆಚ್ಚಾಗಿದೆ. ಈ ಸಮ್ಮಿಲನವನ್ನು ಜನರು ಗಂಭೀರವಾಗಿ ಪರಿಗಣಿಸಿದ್ದಾರೆ. ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ವಿಶ್ವಾಸದಿಂದ ದುಡಿದು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಮನವಿ ಮಾಡಿದರು.


























































