ಹುಬ್ಬಳ್ಳಿ: ಧಾರವಾಡ ಮತ್ತು ತುಮಕೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಅಗತ್ಯವಿರುವ ಶಾಸನಗಳಿಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು.ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದ ಮೂಲಕ ಮಾರುಕಟ್ಟೆಯನ್ನು ಗಳಿಸಿಕೊಳ್ಳಬಹುದು.ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಅವರು, ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದಲ್ಲಿ ಸ್ವಯಂ ಶಿಸ್ತು ತರುವ ಈ ಸಂಸ್ಥೆಗೆ ಎನ್ ಎ ಬಿಎಲ್ ಮಾನ್ಯತೆ ದೊರೆತಿರುವುದು ಸಂತಸ ತಂದಿದೆ. ಮೆಕ್ಯಾನಿಕಲ್ ಹಾಗೂ ಕೆಮಿಕಲ್ ಪರೀಕ್ಷೆ ಸಹ ಆಗುತ್ತದೆ. ನೀರು, ಮಣ್ಣಿನ ಪರೀಕ್ಷೆ ಸಹಾ ಆಗುತ್ತದೆ. ಹುಬ್ಬಳ್ಳಿಯ ಕೆಎಂಟಿಆರ್ಸಿ ಅತ್ಯಾಧುನಿಕ ಉಪಕರಣಗಳ ಪೂರೈಕೆಗಾಗಿ 4 ಕೋಟಿ ರೂಪಾಯಿ ಕೋರಿ ಸಂಸ್ಥೆ ಪ್ರಸ್ತಾವನೆ ಸಲ್ಲಿಸಿದೆ.ಸರ್ಕಾರ ಹಣಕಾಸು ನೆರವನ್ನು ಒಂದು ವಾರದೊಳಗೆ ನೀಡಲು ವ್ಯವಸ್ಥೆ ಮಾಡಲಿದೆ ಎಂದು ಭರವಸೆ ನೀಡಿದರು.
ಹುಬ್ಬಳ್ಳಿ ಧಾರವಾಡದಲ್ಲಿ ಎಫ್ಎಂಜಿಸಿ ಕ್ಲಸ್ಟರ್ ಸ್ಥಾಪನೆ ಮೂಲಕ ಒಂದು ಲಕ್ಷ ಉದ್ಯೋಗ ಸೃಜನೆಯಾಗಲಿವೆ.ಉತ್ತರ ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಇದು ಮಹತ್ವದ ಪಾತ್ರ ವಹಿಸಲಿದೆ. ಬಜೆಟ್ ಘೋಷಿತ ಈ ಕಾರ್ಯಕ್ರಮಕ್ಕೆ ಈಗಾಗಲೇ ಆದೇಶವನ್ನು ಕೂಡ ಹೊರಡಿಸಲಾಗಿದೆ. ಧಾರವಾಡ ಮತ್ತು ತುಮಕೂರು ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಶಾಸನಗಳ ತಿದ್ದುಪಡಿ ಅಗತ್ಯವಿದೆ.ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ತಿದ್ದುಪಡಿಗಳನ್ನು ತರಲಾಗುವುದು. ಭವಿಷ್ಯದಲ್ಲಿ ಈ ಭಾಗದ ನಗರಗಳು ಬೃಹತ್ ಕೈಗಾರಿಕಾ ನಗರಗಳಾಗಿ ಅಭಿವೃದ್ಧಿ ಹೊಂದಲಿವೆ. ಕೈಗಾರಿಕಾ ಉತ್ಪನ್ನಗಳು ತಮ್ಮ ಗುಣಮಟ್ಟ ಕಾಯ್ದುಕೊಂಡರೆ ಮಾರುಕಟ್ಟೆ ತಾನಾಗಿಯೇ ಸೃಷ್ಟಿಯಾಗುತ್ತದೆ. ಕಠಿಣ ಪರಿಶ್ರಮದಿಂದ ಸಣ್ಣ ಕೈಗಾರಿಕೆಗಳನ್ನು ಬೃಹತ್ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಬಹುದು. ಉದ್ಯಮಿಗಳು ಸಾಹಸಿಗಳಾಗಬೇಕು.ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು. ಬರುವ ನವೆಂಬರ್ 2 ಹಾಗೂ 3 ರಂದು ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಸ್ಥಳೀಯ ಕನ್ನಡಿಗ ಉದ್ದಿಮೆದಾರರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕು .ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ. ಉದ್ಯಮದ ಎಲ್ಲಾ ರಂಗಗಳಲ್ಲಿ ಕನ್ನಡಿಗರು ಅಗ್ರಸ್ಥಾನದಲ್ಲಿ ಇರಬೇಕು. ವ್ಯವಸ್ಥೆ ಯ ಲಾಭವನ್ನು ಎಲ್ಲರೂ ಸರಿಯಾಗಿ ಪಡೆದರೆ ಬೆಳೆಯಲು ಸಾಧ್ಯವಿದೆ. ಶ್ರಮಪಟ್ಟರೆ ಯಶಸ್ವಿಯಾಗಲು ಸಾಧ್ಯವಿದೆ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.


















































