ನವದೆಹಲಿ: 80ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಹಲವು ರಾಜ್ಯಗಳಲ್ಲಿ ‘ತಿರಂಗ ಯಾತ್ರೆ’ಗೆ ಚಾಲನೆ ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಮತ್ತು ರಾಷ್ಟ್ರಧ್ವಜದ ಗೌರವವನ್ನು ಎತ್ತಿಹಿಡಿಯುವುದು ಯಾತ್ರೆಯ ಉದ್ದೇಶ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಯಾತ್ರೆಯಲ್ಲಿ ಭಾಗವಹಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿಗಳು ಹಾಗೂ ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಪ್ರತಿಯೊಬ್ಬ ದೇಶಭಕ್ತನ ಕರ್ತವ್ಯ ಎಂದರು. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ತಿರಂಗ ಯಾತ್ರೆ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಉತ್ತರ ಪ್ರದೇಶದಲ್ಲಿ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮಾತನಾಡಿ, ‘ಕಾಕೋರಿ ರೈಲು ಕ್ರಿಯಾ ದಿನ’ದ ಅಂಗವಾಗಿಯೂ ಕಾರ್ಯಕ್ರಮಗಳಿಗೆ ಮಹತ್ವವಿದೆ ಎಂದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತಿರಂಗ ರ್ಯಾಲಿಯಲ್ಲಿ ಭಾಗವಹಿಸಿ, ಯುವಜನತೆ ದೇಶದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿದ್ದು, ಅವರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕಿದೆ ಎಂದು ಹೇಳಿದರು.
ರಾಜಸ್ಥಾನದ ಜೋಧಪುರದಲ್ಲಿ ಸಚಿವ ಜೋಗರಾಮ್ ಪಟೇಲ್ ನೇತೃತ್ವದಲ್ಲಿ ತಿರಂಗ ರ್ಯಾಲಿ ನಡೆಯಿತು. ‘ಹರ್ ಘರ್ ತಿರಂಗ’ ಅಭಿಯಾನದ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಲಾಗುತ್ತಿದೆ ಎಂದು ಅವರು ಹೇಳಿದರು.
‘ಹರ್ ಘರ್ ತಿರಂಗ’ ಅಭಿಯಾನದಡಿ ಮನೆಮನೆಗೂ ರಾಷ್ಟ್ರಧ್ವಜ ತಲುಪಿಸುವ ಕಾರ್ಯಕ್ರಮ ಮುಂದುವರಿಯಲಿದೆ.







































































