ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇವು ಜಾಗತಿಕ ಕಡಲ ಭದ್ರತೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ಭಾರತ ಹೇಳಿದೆ.
ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ (Parvathaneni Harish) ಮಾತನಾಡಿ, ನಾಗರಿಕ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನೌಕಾಯಾನ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುವ ದಾಳಿಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಜಾಗತಿಕ ಇಂಧನ ಮತ್ತು ಪೂರೈಕೆ ಸರಪಳಿ ಭದ್ರತೆ ಕುರಿತು ನಡೆದ ವಿಶ್ವಸಂಸ್ಥೆಯ ವಿಶೇಷ ಸಭೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಓಮನ್ ಕರಾವಳಿಯಲ್ಲಿ ಭಾರತ ಧ್ವಜ ಹೊತ್ತ ವಾಣಿಜ್ಯ ಹಡಗಿನ ಮೇಲೆ ಇತ್ತೀಚೆಗೆ ದಾಳಿ ನಡೆದಿತ್ತು. ಸೊಮಾಲಿಯಾದಿಂದ ಪ್ರಯಾಣಿಸುತ್ತಿದ್ದ ಹಡಗಿನಲ್ಲಿದ್ದ 14 ಸಿಬ್ಬಂದಿಯನ್ನು ಒಮಾನಿ ಅಧಿಕಾರಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆದರೆ ದಾಳಿ ನಡೆಸಿದವರ ಗುರುತು ಇನ್ನೂ ಪತ್ತೆಯಾಗಿಲ್ಲ.
ಮೇ 13ರಂದು ನಡೆದ ಈ ದಾಳಿಯಿಂದ ಹಾರ್ಮುಜ್ ಜಲಸಂಧಿಯ ಭದ್ರತೆ ಕುರಿತು ಆತಂಕ ಹೆಚ್ಚಾಗಿದೆ. ವಿಶ್ವದ ಇಂಧನ ಪೂರೈಕೆಯ ದೊಡ್ಡ ಭಾಗ ಇದೇ ಸಮುದ್ರ ಮಾರ್ಗದ ಮೂಲಕ ಸಾಗುವುದರಿಂದ, ಈ ಪ್ರದೇಶದ ಉದ್ವಿಗ್ನತೆ ಜಾಗತಿಕ ಮಟ್ಟದಲ್ಲಿ ಕಳವಳಕ್ಕೆ ಕಾರಣವಾಗಿದೆ.
ಈ ವರ್ಷ ಆರಂಭದಿಂದಲೂ ಉದ್ವಿಗ್ನ ಪರಿಸ್ಥಿತಿಯ ನಡುವೆ ಕನಿಷ್ಠ ಎರಡು ಭಾರತ ಧ್ವಜದ ಹಡಗುಗಳು ದಾಳಿಗೆ ಒಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.























































