ಬೆಂಗಳೂರು: 50 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅನುಭವಿಸಿದ ಗುಲಾಂ ನಬಿ ಅಜಾದ್ ಅವರು ಪಕ್ಷಕ್ಕೆ ಶಕ್ತಿ ತುಂಬುವ ಕಾಲದಲ್ಲಿ ಉಪಕಾರ ಸ್ಮರಣೆ ಮರೆತಿರುವುದು ಖಂಡನೀಯ. ದೇಶ ಕಷ್ಟ ಕಾಲದಲ್ಲಿರುವಾಗ, ದೇಶವನ್ನು ಒಂದುಗೂಡಿಸಿ ದೇಶದಲ್ಲಿ ಐಕ್ಯತೆ, ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಅವರು ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಆ ಮೂಲಕ ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನದ ಉದಯಪುರದಲ್ಲಿ ನಡೆದ ಚಿಂತನಾ ಶಿಬಿರದಲ್ಲಿ 600 ಜನ ನಾಯಕರು ಚರ್ಚೆ ಮಾಡಿ ಭಾರತವನ್ನು ಯಾವ ರೀತಿ ಉಳಿಸಬೇಕು, ಮುಂದೆ ತೆಗೆದುಕೊಂಡು ಹೋಗಬೇಕು ಎಂದು ತೀರ್ಮಾನಿಸಲಾಗಿತ್ತು. ಆ ಸಭೆಯಲ್ಲಿ ಗುಲಾಂ ನಬಿ ಅಜಾದ್ ಅವರ ಪಾತ್ರವೂ ಪ್ರಮುಖವಾಗಿತ್ತು. ಆದರೆ ಅವರು ಇಂದು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿರುವ ಅಜಾದ್ ಅವರು ಐದು ಪುಟಗಳ ಪತ್ರ ಬರೆದಿದ್ದು, ಅದರಲ್ಲಿ ಅನೇಕ ವಿಚಾರ ಪ್ರಸ್ತಾಪಿಸಿದ್ದಾರೆ ಎಂದರು.
ಅವರು 1977ರಿಂದ ಇಲ್ಲಿಯವರೆಗೂ 50 ವರ್ಷಗಳಲ್ಲಿ ಅವರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜಕಾರಣ ಆರಂಭಿಸಿದ್ದು, ಎಲ್ಲ ಪ್ರಮುಖ ವಿಭಾಗದಲ್ಲಿ ಕೆಲಸ ಮಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಜತೆಗೆ 20 ವರ್ಷಗಳ ಕಾಲ ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ರಾಜ್ಯ ಸಭೆ ಹಾಗೂ ಲೋಕಸಭೆ ಸದಸ್ಯರಾಗಿ ಅಧಿಕಾರ ಅನುಭವಿಸಿದ್ದಾರೆ. ಇಷ್ಟಾದರೂ ಇಂದು ರಾಜೀನಾಮೆ ತೀರ್ಮಾನ ಮಾಡಿದ್ದಾರೆ. ಅವರಿಗೆ ಏನೆಂದು ಹೇಳಬೇಕೋ ಮಾಧ್ಯಮದವರೇ ವಿಶ್ಲೇಷಿಸಬೇಕು ಎಂದು ಡಿಕೆಶಿ ಪ್ರತಿಕ್ರಿಯಿಸಿದರು. ದುಷ್ಪರಿಣಾಮ ಬೀರುವುದಿಲ್ಲ. ಬದಲಿಗೆ ಕಾಂಗ್ರೆಸ್ ಬಲಿಷ್ಠವಾಗಿ ಬೆಳೆಯಲಿದೆ’ ಎಂದು ತಿಳಿಸಿದರು.
ರಾಹುಲ್ ಗಾಂಧಿ ಅವರ ನಾಯಕತ್ವದ ಬಗ್ಗೆ ಪ್ರಶ್ನಿಸಿದ್ದಾರೆ ಎಂಬ ವಿಚಾರ ಕೇಳಿದಾಗ, ‘ಅವರು ನಾಯಕತ್ವ ಎಲ್ಲಿ ತೆಗೆದುಕೊಂಡಿದ್ದಾರೆ. ಪ್ರಧಾನಮಂತ್ರಿ ಆಗುವ ಅವಕಾಶವನ್ನೇ ಅವರು ಕೈಬಿಟ್ಟರು. ನಾವೆಲ್ಲರೂ ಒತ್ತಾಯಿಸಿದರೂ ಅವರು ಉಪಪ್ರಧಾನಿ ಹಾಗೂ ಮಂತ್ರಿ ಸ್ಥಾನ ವಹಿಸಲಿಲ್ಲ. ಪಕ್ಷ ಅವರ ನೇತೃತ್ವದಲ್ಲಿ ಸೋತಾಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರು. ನಾವೆಲ್ಲರೂ ಎಷ್ಟೇ ಬೇಡಿಕೊಂಡರೂ ಅವರು ಒಪ್ಪಲಿಲ್ಲ. ಹೀಗಾಗಿ ಸೋನಿಯಾ ಗಾಂಧಿ ಅವರಿಗೆ ಅಧ್ಯಕ್ಷರಾಗುವಂತೆ ಮನವಿ ಮಾಡಿಕೊಂಡೆವು. ಇಂದಿಗೂ ಅವರು ಪಕ್ಷದ ಕಾರ್ಯಕರ್ತನಂತೆ ಕೆಲಸ ಮಾಡುತ್ತಿದ್ದಾರೆ. ದೇಶದ 3500 ಕಿ.ಮೀ ದೂರ ಪಾದಯಾತ್ರೆ ಮಾಡಿ ದೇಶ ಒಗ್ಗೂಡಿಸಲು ಬಯಸುತ್ತಿದ್ದಾರೆ. ಇದಕ್ಕಾಗಿ ಭಾರತ ಜೋಡೋ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದು ಉತ್ತರಿಸಿದರು.
ಗಾಂಧಿ ಕುಟುಂಬ ಹೊರತಾಗಿ ಬೇರೆಯವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು, ಅದರಲ್ಲಿ ಖರ್ಗೆ ಅವರ ಹೆಸರು ಇದೆಯಂತೆ ಎಂಬ ಪ್ರಶ್ನೆಗೆ, ‘ಗಾಂಧಿ ಕುಟುಂಬ ಹೊರತಾಗಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರುವುದಿಲ್ಲ.ಇದನ್ನು ನಾವು ಈ ಹಿಂದೆಯೂ ನೋಡಿದ್ದೇವೆ. ಗಾಂಧಿ ಕುಟುಂಬ ಪಕ್ಷದ ಜವಾಬ್ದಾರಿ ಹೊತ್ತುಕೊಳ್ಳಲಿದೆ ಎಂಬ ನಮ್ಮ ಭರವಸೆ ಹುಸಿ ಮಾಡುವುದಿಲ್ಲ ಎಂದು ಭಾವಿಸಿದ್ದೇವೆ. ನಾವೆಲ್ಲರೂ ಅವರ ಬೆನ್ನಿಗೆ ನಿಲ್ಲುತ್ತೇವೆ’ ಎಂದರು.