ಮಂಡ್ಯ: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಂಸದ ಜಿ.ಮಾದೇಗೌಡ ಅವರ ಯೋಗಕ್ಷೇಮವನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬುಧವಾರ ವಿಚಾರಿಸಿದರು.
ಕೆ.ಎಂ.ದೊಡ್ಡಿಯ ಜಿ.ಮಾದೇಗೌಡ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌಡರನ್ನು ಸ್ವಾಮೀಜಿ ಅವರ ಜತೆ ಭೇಟಿಯಾದ ಡಿಸಿಎಂ ಅವರು, ಗೌಡರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ; ಓರ್ವ ಹೋರಾಟಗಾರರಾಗಿ, ಸಂಸದರಾಗಿ ಹಾಗೂ ರಾಜಕೀಯ ನಾಯಕರಾಗಿ ಜಿ.ಮಾದೇಗೌಡರು ಮಂಡ್ಯಕ್ಕೆ ಮಾತ್ರವಲ್ಲದೆ, ಇಡೀ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಆರೋಗ್ಯ ಸುಧಾರಿಸಿ ಬೇಗ ಅವರು ಮನೆಗೆ ಮರಳಲಿ ಎಂದು ಹಾರೈಸಿದರು.




















































