ಬೆಂಗಳೂರು: ಅಕ್ರಮ ಗಣಿಗಾರಿಕೆಯಲ್ಲಿ ಇಲಾಖೆಯ ಅಧಿಕಾರಿಗಳು ಭಾಗಯಾಗಿರುವುದು ಕಂಡು ಬಂದರೆ ತಕ್ಷಣವೇ ಅಂತಹವರನ್ನು ಸೇವೆಯಿಂದ ಅಮಾನತು ಪಡಿಸಿ, ಎಷ್ಟೇ ಪ್ರಭಾವಿಗಳಾಗಿದ್ದರೂ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆಂದು ಗಣಿ ಮತ್ತು ಭೂವಿಜ್ಞಾನಿ ಸಚಿವ ಮುರುಗೇಶ ಆರ್ ನಿರಾಣಿ ರವರು ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈ ವಾರ ಮಂಡ್ಯ ಜಿಲ್ಲೆಯ ಗಣಿಗಾರಿಕೆ ನಡೆಯುವ ಪ್ರದೇಶಗಳಿಗೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮಾಧ್ಯಮದರವರ ಜೊತೆ ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.
ಒಂದು ವೇಳೆ ಭೇಟಿಯ ಸಂದರ್ಭದಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳ ಅಕ್ರಮ ಗಣಿಗಾರಿಕೆಯಲ್ಲಿ ಕಂಡು ಬಂದರೆ ಅಂತಹವರನ್ನು ಕೂಡಲೇ ಅಮಾನತು ಪಡಿಸುತ್ತೇನೆ. ನಮ್ಮ ಸರ್ಕಾರ ಎಷ್ಟೇ ಪ್ರಭಾವಿಗಳಾಗಿದ್ದರೂ ಯಾವುದಕ್ಕೆ ಜಗ್ಗದೆ ಕಾನೂನು ಕ್ರಮ ಜರುಗಿಸುತ್ತದೆ ಎಂದು ತಿಳಿಸಿದರು.
ಕಳೆದ ಪೆಬ್ರವರಿ 22ರಂದು ನಾನೆ ಮಂಡ್ಯ ಜಿಲ್ಲೆಯ ಗಣಿಗಾರಿಕೆ ಪ್ರದೇಶಗಳಿಗೆ ಸಂಸದರು ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ. ಕಳೆದ ಮೂರು ತಿಂಗಳಿಂದ ಕೆ.ಆರ್.ಎಸ್ ಅಣೆಕಟ್ಟಿನ ಸುತ್ತಮುತ್ತಲ 15 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಕಾರಿಕೆ ನಡೆಸಲು ಅವಕಾಶ ಕೊಟ್ಟಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಕೆಲವು ಗಣಿಕಾರಿಕೆ ಕಂಪನಿಗಳು ಕಾನೂನು ಬಾಹಿರವಾಗಿ ಗಣಿಕಾರಿಕೆ ನಡೆಸುತ್ತಿರುವುದು ಗಮನಕ್ಕೆ ಬಂದ ತಕ್ಷಣ ಅವುಗಳಿಗೆ ದಂಡ ವಿಧಿಸಿ ಯಾವುದೇ ರೀತಿಯ ಚಟುವಟಿಕೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದು ಸಚಿವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಕಾರಿಕೆ ನಡೆಯುತ್ತದೆ ಎಂದು ಸಂಸದರು ನಮ್ಮ ಗಮನಕ್ಕೆ ತಂದ ಕೂಡಲೇ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೆ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಆತಂಕ ಬೇಡ ಎಂದು ಸಚಿವ ನಿರಾಣಿ ಅವರು ಹೇಳಿದರು.
ಮಂಡ್ಯ ಜಿಲ್ಲೆಯಲ್ಲಿ ಒಟ್ಟು 38 ಗಣಿಕಾರಿಕೆಗಳನ್ನು ನಿಲ್ಲಿಸಿದ್ದೇವೆ. ಜಿಲ್ಲಾಡಳಿತ ಹಾಗೂ ನಮ್ಮ ಇಲಾಖೆಯ ಹಿರಿಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ನೀಡಿರುವ ವರದಿ ಪ್ರಕಾರ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಗಣಿಕಾರಿಕೆ ನಡೆಯುತ್ತಿಲ್ಲ. ಒಂದು ವೇಳೆ ನಮ್ಮ ಗಮನಕ್ಕೆ ಬಂದರೆ ತಕ್ಷಣವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.