ಬೆಂಗಳೂರು: ಬಿಜೆಪಿ ನೇತೃತ್ವದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು 10-7-2022ರಂದು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ಜನಪ್ರತಿನಿಧಿಗಳ ಜೊತೆ ಸಭೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು ಎಂದು ಪಕ್ಷದ ರಾಜ್ಯ ಬಿಹೆಪಿ ಉಪಾಧ್ಯಕ್ಷ ನಿರ್ಮಲ್ಕುಮಾರ್ ಸುರಾಣ ತಿಳಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರು ಸರಳತೆಯನ್ನು ಮೈಗೂಡಿಸಿಕೊಂಡವರು. ಬುಡಕಟ್ಟು ಜನಾಂಗಕ್ಕೆ ಸೇರಿದ ಅವರು, ಎರಡು ದಶಕಕ್ಕೂ ಹೆಚ್ಚು ಕಾಲ ರಾಜಕೀಯ ಮತ್ತು ಸಾಂವಿಧಾನಿಕ ಹುದ್ದೆಗಳಲ್ಲಿ ಮೇಲೇರುತ್ತಲೇ ಬಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಒಡಿಶಾದ ಮಯೂರ್ಗಂಜ್ನಲ್ಲಿ ಶಾಲಾ ಶಿಕ್ಷಣ, ಭುವನೇಶ್ವರದಲ್ಲಿ ಕಾಲೇಜು ಶಿಕ್ಷಣ ಪೂರೈಸಿದ ಅವರು ಕಲಾ ಪದವಿ ಪಡೆದಿದ್ದಾರೆ. ಶಿಕ್ಷಣದ ನಂತರ ಒಡಿಶಾ ಸರಕಾರದ ನೀರಾವರಿ ಇಲಾಖೆಯಲ್ಲಿ ನೌಕರಿ, ಆನಂತರ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಅವರಿಗಿದೆ. ಇದರ ಮಧ್ಯೆಯೇ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯೂ ಆದರು. ಅದರ ನಂತರ ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಕಣಕ್ಕೆ ಇಳಿದು ಆರಿಸಿ ಬಂದರು. ಬಿಜೆಡಿ–ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು. 2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು ಎಂದು ತಿಳಿಸಿದ್ದಾರೆ.
2013ರಲ್ಲಿ ಬಿಜೆಪಿಯ ಪರಿಶಿಷ್ಟ ಪಂಗಡ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಅವರು ಆಯ್ಕೆಯಾದರು. ನಂತರ 2015ರಲ್ಲಿ ಜಾಖರ್ಂಡ್ನ ರಾಜ್ಯಪಾಲೆಯಾಗಿ ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲಿನ ಮೊದಲ ಮಹಿಳಾ ರಾಜ್ಯಪಾಲರು ಎಂಬ ಹೆಗ್ಗಳಿಕೆ, ರಾಜ್ಯಪಾಲರ ಹುದ್ದೆಗೆ ಏರಿದ ಒಡಿಶಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಜಾರ್ಖಂಡ್ನ ರಾಜ್ಯಪಾಲರಾಗಿ ಪೂರ್ಣಾವಧಿಯನ್ನು ಪೂರೈಸಿದ ಮೊದಲಿಗರು ಎಂಬ ಹೆಗ್ಗಳಿಕೆಯೂ ಅವರಿಗೆ ಇದೆ ಎಂದು ನಿರ್ಮಲ್ಕುಮಾರ್ ಸುರಾಣ ತಿಳಿಸಿದ್ದಾರೆ.







































































