ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರು ಮಹಿಳೆಯರ ಕುರಿತು ಕೀಳು ಅಭಿರುಚಿಯ ಹೇಳಿಕೆ ನೀಡಿದ್ದು, ಅವರು ದೇಶದ ಮಹಿಳೆಯರ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಅವರು ಆಗ್ರಹಿಸಿದ್ದಾರೆ.
ಸರಕಾರಿ ನೌಕರಿ ಪಡೆಯಲು ಮಹಿಳೆಯರು ಮಂಚ ಏರಬೇಕು ಹಾಗೂ ಯುವಕರು ಲಂಚ ಕೊಡಬೇಕೆಂದು ಪ್ರಿಯಾಂಕ್ ಖರ್ಗೆ ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ಕುಸಂಸ್ಕøತಿಯನ್ನು ಅನಾವರಣಗೊಳಿಸಿದ್ದಾರೆ. ಇದು ಭೂತದ ಬಾಯಿಯಲ್ಲಿ ಭಗವದ್ಗೀತೆ ಹೇಳಿದಂತಿದೆ ಎಂದು ಅವರು ಖಂಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಸ್ವತಃ ಭ್ರಷ್ಟಾಚಾರ ಮತ್ತು ಕುಸಂಸ್ಕøತಿಯ ಪದ ಬಳಸಿ ತಮ್ಮನ್ನು ಚಾಲ್ತಿಯಲ್ಲಿಡಲು ಬಯಸುತ್ತಿದ್ದಾರೆ. ಅವರು ಮಹಿಳೆಯರ ಕುರಿತು ಗೌರವದಿಂದ ಮಾತನಾಡಬೇಕು. ಈ ರೀತಿಯ ಅಸಭ್ಯ ಪದ ಬಳಸಿದ ಅವರ ವಿರುದ್ಧ ಕಾಂಗ್ರೆಸ್ ಪಕ್ಷವು ಉಗ್ರವಾದ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.
ಇದು ಸರಕಾರಿ ನೌಕರಿಯಲ್ಲಿರುವ ಸಮಸ್ತ ಮಹಿಳಾ ಕುಲಕ್ಕೆ ಅವಮಾನ ಮಾಡಿದ ಹಾಗಿದೆ. ಇದರ ವಿರುದ್ಧ ಮಹಿಳಾ ಮೋರ್ಚಾವು ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟ ಹಮ್ಮಿಕೊಳ್ಳಲಿದೆ. ನಾಲಿಗೆಯ ಮೇಲೆ ಹಿಡಿತವಿಲ್ಲದ ಪ್ರಿಯಾಂಕ್ ಖರ್ಗೆಗೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಹಿಳಾ ಸರಕಾರಿ ನೌಕರರೆಲ್ಲರೂ ಉತ್ತಮ ಕುಟುಂಬದ ಹಿನ್ನೆಲೆಯನ್ನು ಹೊಂದಿದ್ದಾರೆ. ಪರಿಶ್ರಮದ ಮೂಲಕ ಕೆಲಸ ಪಡೆದು ಉನ್ನತ ಹುದ್ದೆಗಳನ್ನೇರಿದ್ದಾರೆ. ಅಲ್ಲದೆ, ಐಎಎಸ್, ಕೆಎಎಸ್ ಸೇರಿದಂತೆ ಅನೇಕ ಉತ್ತಮ ಕೋರ್ಸ್ಗಳ ಮೂಲಕ ಸಾಧನೆ ಮಾಡಿದ್ದಾರೆ. ದೇಶದಲ್ಲಿ ರಾಷ್ಟ್ರಪತಿಯಾಗಿ ಮಹಿಳೆಯೊಬ್ಬರು ಇರುವ ಇಂಥ ಕಾಲಘಟ್ಟದಲ್ಲಿ ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆ ಅವರ ಕೀಳು ಅಭಿರುಚಿಗೆ ಸ್ಪಷ್ಟ ನಿದರ್ಶನ ಎಂದು ಟೀಕಿಸಿದ್ದಾರೆ.
ಡಾ. ಬಾಬಾಸಾಹೇಬ ಅಂಬೇಡ್ಕರ್, ಗಾಂಧೀಜಿ ಅವರ ಬಗ್ಗೆ ತತ್ವ, ಸಿದ್ಧಾಂತ ಹೇಳುವ ಪ್ರಿಯಾಂಕ್ ಖರ್ಗೆ ಅವರು ಮಹಿಳೆಯರನ್ನು ಈ ರೀತಿ ಅವಮಾನಿಸಿದ್ದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿಗಳನ್ನು ‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿ ಅವಮಾನ ಮಾಡಿದ್ದರು. ಇದೀಗ ಪ್ರಿಯಾಂಕ್ ಖರ್ಗೆ ಅದೇ ಮಾದರಿಯಲ್ಲಿ ಕಾಂಗ್ರೆಸ್ನವರ ಕೀಳು ಅಭಿರುಚಿಯನ್ನು ಮುಂದುವರಿಸಿದ್ದಾರೆ ಎಂದು ಅವರು ಖಂಡಿಸಿದ್ದಾರೆ.



















































