ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳ ಬಲವರ್ಧನೆಗೆ ಒತ್ತು ನೀಡುವ ಮೂಲಕ ರಾಜ್ಯದಲ್ಲಿರುವ ಎಲ್ಲಾ ಡಿಸಿಸಿ ಬ್ಯಾಂಕುಗಳನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುತ್ತಿರುವುದು ಸಹಕಾರಿ ಬ್ಯಾಂಕುಗಳ ಪ್ರಗತಿಶೀಲ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಿರುವುದು ಪ್ರಶಂಸನೀಯವಾದುದು ಎಂದು ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಲ್ಲಿ ಸಹಕಾರ ಚಳವಳಿಯ ಮಾತೃ ಸಂಸ್ಥೆಯಾದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಕ್ಕೆ ಸಲ್ಲಿಸಬೇಕಾದ ಶಿಕ್ಷಣ ನಿಧಿಯನ್ನು ಸ್ವೀಕರಿಸಿ ಮಾತನಾಡಿದರು. ಸಹಕಾರ ಸಚಿವರು ಈಗಾಗಲೇ ರೈತರಿಗೆ ಒತ್ತು ನೀಡುವ ನಿಟ್ಟಿನಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಹುಪಯೋಗಿ ಕೇಂದ್ರಗಳನ್ನಾಗಿಸಲು ಯೋಜನೆಯನ್ನು ರೂಪಿಸಿದ್ದಾರೆ. ಸಚಿವರು ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಜಾತ್ಯಾತೀತವಾಗಿ ಹಾಗೂ ಪಕ್ಷಾತೀತವಾಗಿ ಎಲ್ಲಾ ಸಹಕಾರಿಗಳನ್ನು ಒಟ್ಟುಗೂಡಿಸಿ ಸಹಕಾರ ಚಳವಳಿಯ ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತಿರುವುದು ರಾಜ್ಯದ ಸಹಕಾರಿಗಳಲ್ಲಿ ಉತ್ಸಾಹವನ್ನು ಮೂಡಿಸಿದೆ ಎಂದರು.
ರಾಜ್ಯದ ಸಹಕಾರ ಚಳವಳಿಯ ಮಾತೃಸಂಸ್ಥೆಯಾಗಿ ಗುರುತಿಸಿಕೊಂಡಿರುವ ಮಹಾಮಂಡಳ ಶಿಕ್ಷಣ, ತರಬೇತಿ ಮತ್ತು ಪ್ರಚಾರದ ಮೂಲಕ ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾ ಸಹಕಾರ ಯೂನಿಯನ್ಗಳನ್ನು ಸಹಕಾರ ಕ್ಷೇತ್ರದ ಮಾಹಿತಿ ಕೇಂದ್ರಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಮಹಾಮಂಡಳ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದರು.
ಹಾಗೆಯೇ, ರಾಜ್ಯದ ಹಿರಿಯ ಸಹಕಾರಿಗಳು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರಕುಮಾರ್ ರವರು ಸಹಕಾರಿ ಮುಖಂಡರಾಗಿ ಸಾಧಿಸಿರುವ ಸಾಧನೆ ಎಲ್ಲಾ ಸಹಕಾರಿಗಳಿಗೂ ಆದರ್ಶ ಹಾಗೂ ಮಾದರಿಯಾಗಿದ್ದು, ಇವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕು ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಉತ್ತಮವಾದ ಕಾರ್ಯಚಟುವಟಿಕೆಗಳ ಮೂಲಕ ರಾಷ್ಟçಮಟ್ಟದಲ್ಲಿ ಹೆಸರುಗಳಿಸಿವೆ. ಹಾಗೆಯೇ ಈ ಸಂದರ್ಭದಲ್ಲಿ ಮಾರಾಟ ಮಹಾಮಂಡಳದ ಶಿಕ್ಷಣ ನಿಧಿಯನ್ನು ಅವರು ನೀಡುವ ಮೂಲಕ ಇತರ ಸಂಸ್ಥೆಗಳಿಗೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ರವರು ಮಾತನಾಡಿ, ಮಾರಾಟ ಮಹಾಮಂಡಳ ರಾಜೇಂದ್ರಕುಮಾರ್ ರವರ ನೇತೃತ್ವದಲ್ಲಿ ಉತ್ತಮ ಸಾಧನೆ ಮಾಡಿದೆ. ಈ ಸಂದರ್ಭದಲ್ಲಿ ಅವರು ಮಾತೃಸಂಸ್ಥೆಗೆ ಶಿಕ್ಷಣ ನಿಧಿ ನೀಡುತ್ತಿರುವುದು ಸ್ವಾಗತಾರ್ಹವಾದ ಬೆಳವಣಿಗೆ ಎಂದು ಅಭಿನಂದಿಸಿದರು.
ರಾಜ್ಯದ ಎಲ್ಲಾ ಸಹಕಾರ ಸಂಸ್ಥೆಗಳ ಮಾತೃ ಸಂಸ್ಥೆಯಾದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನೇತೃತ್ವವನ್ನು ಜಿ.ಟಿ. ದೇವೇಗೌಡ ಅವರು ವಹಿಸಿದ್ದು, ಈಗಾಗಲೇ ಸಂಸ್ಥೆಯ ಕಾರ್ಯಚಟುವಟಿಕೆಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿ ಸಂಸ್ಥೆಯನ್ನು ಯಶಸ್ಸಿನತ್ತ ಕೊಂಡೊಯ್ಯುತ್ತಿರುವುದು ಉತ್ತಮವಾದ ಸಾಧನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರಕುಮಾರ್ ರವರು ಮಾತನಾಡಿ, ಸಹಕಾರ ಕ್ಷೇತ್ರ ಪವಿತ್ರವಾದ ಕ್ಷೇತ್ರವಾಗಿದ್ದು, ಯಾವುದೇ ರೀತಿಯ ರಾಜಕೀಯ ಹಿತಾಸಕ್ತಿಯನ್ನು ಇಟ್ಟುಕೊಳ್ಳದೆ ಕಾರ್ಯನಿರ್ವಹಿಸಿದ್ದಲ್ಲಿ ಸಂಸ್ಥೆಗಳು ಉತ್ತಮವಾಗಿ ಬೆಳವಣಿಗೆ ಹೊಂದುತ್ತವೆ. ಈಗಾಗಲೇ ಕೇಂದ್ರದಲ್ಲಿ ಸಹಕಾರ ಸಚಿವಾಲಯ ಆರಂಭವಾಗಿದ್ದು, ಸಹಕಾರ ಸಚಿವರಾದ ಅಮಿತ್ ಷಾ ಅವರು ಪ್ಯಾಕ್ಸ್ ಗಳಿಗೆ ಹೆಚ್ಚಿನ ಆದ್ಯತೆ ನೀಡಲು ಪ್ರತಿ ಹಳ್ಳಿಯಲ್ಲಿಯೂ ಪ್ಯಾಕ್ಸ್ ಗಳ ಮೂಲಕ ಜನೋಪಯೋಗಿ ಕೇಂದ್ರಗಳನ್ನು ತೆರೆದು ಅವುಗಳನ್ನು ಅಭಿವೃದ್ಧಿಪಡಿಸುವಂತೆ ನಿರ್ದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದಲ್ಲಿ ಸಹಕಾರ ಸಚಿವರು ಪ್ಯಾಕ್ಸ್ಗಳ ಬಲವರ್ಧನೆಗೆ ಮುಂದಾಗಿರುವುದು ಸ್ವಾಗತಾರ್ಹವಾದ ನಡೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಮಾರಾಟ ಮಹಾಮಂಡಳದ ಉಪಾಧ್ಯಕ್ಷರಾದ ಬಸಗೌಡರಾಮಗೌಡ ಪಾಟೀಲ, ಆಡಳಿತ ಮಂಡಳಿ ನಿರ್ದೇಶಕರುಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಆರ್. ಶ್ರೀಧರ್, ರಾಜ್ಯ ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಎಸ್. ಅರಳಿ ಸೂರ್ಯಕಾಂತ್, ಸಹಕಾರ ಇಲಾಖೆ ವಿಶೇಷ ಕರ್ತವ್ಯಾಧಿಕಾರಿ ಎ.ಸಿ. ದಿವಾಕರ್, ಕಾರ್ಯದರ್ಶಿ ಲಕ್ಷ್ಮಿಪತಯ್ಯ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.


























































