ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಮೇಲಿನ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಿಜೆಪಿ ಪರಿವಾರದ ಸುಳ್ಳಿನ ಭಜನೆಯನ್ನು ತೀವ್ರವಾಗಿ ಖಂಡಿಸುವುದಾಗಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅವರು, “ಸುಳ್ಳು” ಬಿಜೆಪಿ ಮತ್ತು ಸಂಘ ಪರಿವಾರದವರ ಮನೆ ದೇವರು. ಆಧಾರ ರಹಿತ ಸುಳ್ಳು ಪ್ರಚಾರಗಳಿಂದಲೇ ತಮ್ಮ ಅಸ್ತಿತ್ವ ಉಳಿಸಿಕೊಂಡಿರುವ ಈ ಪರಿವಾರ ನನ್ನ ವಿರುದ್ಧ ಇದುವರೆಗೂ ಸಾವಿರದೊಂದು ಸುಳ್ಳುಗಳನ್ನು ಪ್ರಚಾರ ಮಾಡಿದೆ. ಈ ಸುಳ್ಳುಗಳಲ್ಲಿ ಪಿಎಫ್ಐ ಸಂಘಟನೆ ನನ್ನಿಂದಲೇ ಬೆಳೆದಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಸಾವಿರ ಸುಳ್ಳುಗಳನ್ನು ಹಿಂದಕ್ಕೆ ಪಡೆದಿದ್ದೇನೆ ಎಂದು ಸುಳ್ಳು ಉದುರಿಸಿಕೊಳ್ಳುತ್ತಾ ತಿರುಗುತ್ತಿದ್ದಾರೆ ಎಂದಿದ್ದಾರೆ.
ಇದೇ ಆರೋಪವನ್ನು ಈ ಹಿಂದೆಯೂ ಮಾಡಿದ್ದರು. ಆಗಲೇ ನಾನು ಬಿಜೆಪಿ ಸರ್ಕಾರಕ್ಕೆ ಈ ಬಗ್ಗೆ ನಾಲ್ಕು ಪತ್ರಗಳನ್ನು ಬರೆದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದೆಯೇ? ಯಾವುದೇ ರಾಜಕೀಯ ಪಕ್ಷ ಮತ್ತು ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತೇ ಎನ್ನುವ ಪ್ರಶ್ನೆ ಕೇಳಿದ್ದೆ.
ನನ್ನ ಪ್ರಶ್ನೆಗಳಿಗೆ ಬಿಜೆಪಿ ಸರ್ಕಾರವೇ ನೀಡಿರುವ ಉತ್ತರದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಪಿಎಫ್ಐ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿದಿರುವುದರ ಬಗ್ಗೆ ಉಲ್ಲೇಖಗಳೇ ಇಲ್ಲ.
ಬದಲಿಗೆ ನಾನು ಮುಖ್ಯಮಂತ್ರಿ ಆಗಿದ್ದ ಸರ್ಕಾರದ ಅವಧಿಯಲ್ಲಿ ರೈತ, ದಲಿತ, ಕಾರ್ಮಿಕ, ಕಮ್ಯುನಿಸ್ಟ್ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರುಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಗ್ಗೆ ಬಿಜೆಪಿ ಸರ್ಕಾರವೇ ಉತ್ತರಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆದ ಪ್ರಕರಣಗಳ ಸ್ವರೂಪ ಮತ್ತು ಘಟನೆಗಳ ಕುರಿತಾಗಿ ಬಿಜೆಪಿ ಸರ್ಕಾರವೇ ನೀಡಿರುವ ಉತ್ತರದ ಕೆಲವೊಂದು ಸ್ಯಾಂಪಲ್ಗಳನ್ನು ಮಾತ್ರ ಇಲ್ಲಿ ನೀಡಿದ್ದೇನೆ. ನೂರಾರು ಪುಟಗಳಲ್ಲಿ ಸರ್ಕಾರ ಉತ್ತರ ನೀಡಿದೆ. ಯಾವ ಉತ್ತರದಲ್ಲೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳ ಉಲ್ಲೇಖವಿಲ್ಲ ಎಂದವರು ತಿಳಿಸಿದ್ದಾರೆ.