ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಹೆಸರಿನಲ್ಲಿ ಬಿಜೆಪಿಯವರು ಸ್ವಂತ ಕಾರ್ಯಕ್ರಮ ಮಾಡಿಕೊಂಡು, ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾಸರಹಳ್ಳಿ ಶಾಸಕ ಮಂಜುನಾಥ್ ರವರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಅಮ್ ಆದ್ಮಿ ಪಕ್ಷದ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಥಯಾತ್ರೆ ಮುಖಾಂತರ ಮಣ್ಣನ್ನು ಶೇಖರಣೆ ಮಾಡುತ್ತಿದ್ದಾರೆ. ಇದು ರಾಜಕೀಯವಾಗಿ ಜನರನ್ನು ಸೆಳೆಯುವ ಕಾರ್ಯಕ್ರಮ ಆಗುತ್ತಿದೆ. ನಮ್ಮ ಸಮಾಜದ ಹಿರಿಯರನ್ನು ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು.
ರಥಯಾತ್ರೆ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಭಾವಚಿತ್ರ ಹಾಕಿದ್ದಾರೆ. ನಮ್ಮ ಸಮಾಜದ ಸ್ವಾಮೀಜಿಗಳ ಭಾವಚಿತ್ರ ಇಲ್ಲ. ನಮ್ಮ ಸಮುದಾಯ ಹಿರಿಯರಾದ ಹೆಚ್.ಡಿ ದೇವೇಗೌಡರು, ಎಸ್.ಎಂ.ಕೃಷ್ಣ ಅವರ ಭಾವಚಿತ್ರ ಇಲ್ಲ. ಅವರಿಗೆ ಅಗೌರವ ತೋರಿಸುವ ಮೂಲಕ ಬಿಜೆಪಿಯ ಕಾರ್ಯಕ್ರಮ ಮಾಡಿಕೊಂಡು ಹೊರಟ್ಟಿದ್ದಾರೆ. ಹಾಗಾಗಿ, ದಾಸರಹಳ್ಳಿ, ತಿಪಟೂರು, ದೇವನಹಳ್ಳಿ, ಹೊಸಕೋಟೆ ಸೇರಿದಂತೆ ಹಲವು ಕಡೆ ಬಿಜೆಪಿ ರಥಯಾತ್ರೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಸಣ್ಣತನದ ವಾತಾವರಣ ನಿರ್ಮಾಣ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕಾದ ಕೆಲಸವನ್ನು ಒಂದು ಪಕ್ಷದ ಕೆಲಸ ಮಾಡಿಕೊಂಡಿದಕ್ಕೆ ಜನ ಧಿಕ್ಕರಿಸಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯವಾಗಿ ಜೆಡಿಎಸ್ ಇದೆ. ನನ್ನ ಮೇಲೆ ನಂಬಿಕೆ ಇದೆ. ಎಎಪಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಎರಡು ತಿಂಗಳಿಂದ ಕೆಲಸ ಮಾಡ್ತಾ ಇದ್ದಾರೆ.
ಪಕ್ಷದಲ್ಲಿ ಮಹಿಳೆಯರ ಸಂಘಟನೆಗೆ ಸ್ಥಾನಮಾನ ನೀಡಲು ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳ ಜನ ಪರ ಸರ್ಕಾರ ತರುವ ನಿಟ್ಟಿನಲ್ಲಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.
ಮಾದರಿಯಾಗಿ ಶಾಸಕ ಮಂಜುನಾಥ್ ಕೆಲಸ ಮಾಡುತ್ತಿದ್ದಾರೆ. ಈ ರೀತಿಯ ಶಾಸಕರು ಎಲ್ಲ ಕ್ಷೇತ್ರಕ್ಕೂ ಬೇಕಾಗಿದೆ. ನವೆಂಬರ್ 1 ರಂದು ಕನ್ನಡ ಧ್ವಜ ನೀಡುತ್ತಿರುವ ಮಂಜುನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನಮ್ಮ ಪಂಚರತ್ನ ಯೋಜನೆ ಇಟ್ಟುಕೊಂಡು ಶಿಕ್ಷಣ, ಉದ್ಯೋಗ, ಸೇರಿದಂತೆ ಕಾರ್ಯಕ್ರಮಗಳನ್ನಯ ರೂಪಿಸಲಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಾಡಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
ಇತ್ತೀಚೆಗೆ ಇನ್ಸ್ಪೆಕ್ಟರ್ ನಂದೀಶ್ ಅವರನ್ನು ಬಾಣಸವಾಡಿಗೆ ವರ್ಗಾವಣೆ ಮಾಡಲು ಪ್ರಯತ್ನ ಮಾಡಿದರು. ಆದರೆ ಕೆಆರ್ ಪುರಂ ಗೆ ವರ್ಗಾವಣೆ ಮಾಡಿಸಿಕೊಂಡರು. ಸಚಿವ ಎಂಟಿಬಿ ನಾಗರಾಜ್ ಅವರು ವಿಡಿಯೋ ಮುಂದೆ ಇಟ್ಟಾಗ ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಈಗ ಕಾಂಗ್ರೆಸ್ ನಾಯಕರು ಸರ್ಕಾರದ ಮೇಲೆ ಬಿದ್ದಾರೆ. ಈಗ ರಸ್ತೆಯಲ್ಲಿ ಬರುವಾಗ ನೋಡಿದೆ, ದಾರಿಯಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿದ್ದರು. ಯಾಕೆ ಈ ಪರಿಸ್ಥಿತಿ ಬರುತ್ತದೆ ನಮಗೆ? ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಮನೆಮನೆಯ ಮೇಲೂ ಕನ್ನಡ ಭಾವುಟ ಹಾರಲಿ:
ಈಗಾಗಲೇ ನಾನು ನವೆಂಬರ್ 1 ಕ್ಕೆ ಪ್ರತಿ ಮನೆಯಲ್ಲಿ ಕನ್ನಡ ಧ್ವಜ ಹಾರಿಸಲು ನಾನು ಮನವಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರು, ಹಲವಾರು ಸಂಘಟನೆಗಳು ತಮ್ಮ ಮನೆ ಮೇಲೆ ಧ್ವಜ ಹಾರಿಸಲು ತೀರ್ಮಾನಿಸಿದಕ್ಕೆ ನಾನು ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಹೆಚ್ ಡಿಕೆ, ನವೆಂಬರ್1 ರಂದು ಪಂಚರತ್ನ ಯಾತ್ರೆಯಂದು ನಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.
ನಮ್ಮ ನಾಡಿನಲ್ಲಿ ಭಾಷೆಗೆ ಧಕ್ಕೆ ಬರುವ ರೀತಿಯಲ್ಲಿ ಕೇಂದ್ರ ಸರ್ಕಾರ ಮಾಡುತ್ತಿದೆ. ಇದನ್ನು ನಾವು ಎದುರಿಸಲು ಸಿದ್ದವಾಗಿದ್ದೇವೆ ಎಂದರು.
ಇದೇ ವೇಳೆ, ದಾಸರಹಳ್ಳಿ ಶಾಸಕ ಮಂಜುನಾಥ್ ಅವರು, ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿ ಮನೆ ಮೇಲೆ ಬಾವುಟ ಹಾರಿಸಲು ಕರೆ ನೀಡಿದ ಹೆಚ್ ಡಿಕೆ, ದಾಸರಹಳ್ಳಿಯಲ್ಲಿ ಕನ್ನಡದ ಬಾವುಟ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಸ್ವಇಚ್ಛೆಯಿಂದ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಎಎಪಿ ಹಾಗೂ ಇತರೆ ಪಕ್ಷದ ಮುಖಂಡರು ಜೆಡಿಎಸ್ ಸೇರ್ಪಡೆ ಆಗುತ್ತಿದ್ದು, ಅವರೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುವುದಾಗಿ ಕುಮಾರಸ್ವಾಮಿ ಹೇಳಿದರು.
























































