ಬೆಂಗಳೂರು: ಜನಸಂಕಲ್ಪ ಸಮಾವೇಶ, ಎಸ್ಟಿ ಸಮ್ಮೇಳನ, ಒಬಿಸಿ ಸಮಾವೇಶಗಳಲ್ಲಿ ಲಕ್ಷಾಂತರ ಜನರು ಪಾಲ್ಗೊಂಡಿರುವುದು ರಾಜ್ಯದಲ್ಲಿ ಬಿಜೆಪಿ ಪರ ಒಲವಿನ ಸಂಕೇತವಾಗಿದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಜನಸಂಕಲ್ಪ ಸಮಾವೇಶಗಳಲ್ಲಿ ಜನರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಜನರ ಸಮರ್ಥನೆ ಬಿಜೆಪಿ ಪರವಾಗಿ ಇರುವುದು ಇದರಿಂದ ಸ್ಪಷ್ಟವಾಗುತ್ತದೆ. ನಾನು ಮತ್ತು ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ಕಾರ್ಯಕರ್ತರ ಸಂಕಲ್ಪ ಯಾತ್ರೆಯಲ್ಲೂ ಕಾರ್ಯಕರ್ತರ ಪಾಲ್ಗೊಳ್ಳುವಿಕೆ ಗರಿಷ್ಠ ಪ್ರಮಾಣದಲ್ಲಿದೆ. ಇವೆಲ್ಲವನ್ನು ಗಮನಿಸಿದರೆ ಕಾರ್ಯಕರ್ತರಲ್ಲಿ ಗೆಲುವಿನ ವಿಶ್ವಾಸ ಇರುವುದು ಸ್ಪಷ್ಟ ಎಂದು ನುಡಿದರು.
ರಾಜ್ಯದ ಜನರೂ ಬಿಜೆಪಿ ಸರಕಾರವನ್ನೇ ಮತ್ತೆ ಬಯಸುತ್ತಿದ್ದಾರೆ. ನಾವು 150 ಶಾಸಕರ ಸ್ಥಾನಗಳನ್ನು ಗೆಲ್ಲಲಿದ್ದೇವೆ. ಸರಕಾರ ರಚಿಸಿ ವೇಗದಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲಿದ್ದೇವೆ ಎಂದು ತಿಳಿಸಿದರು.ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ; ಈ ಕುರಿತು ರಾಜ್ಯಾಧ್ಯಕ್ಷರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಅಜೆಂಡ ಇಲ್ಲ. ಆದ್ದರಿಂದ ಅವರು ಆರೋಪಗಳನ್ನು ಮಾಡುವುದರಲ್ಲೇ ಇರುತ್ತಾರೆ ಎಂದು ತಿಳಿಸಿದರು.





















































