ಬೆಳಗಾವಿ: ಕಾಂಗ್ರೆಸ್ ಪಕ್ಷ ಶುಕ್ರವಾರ ವಿಜಯಪುರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಜ.2 ರಂದು ಮಹದಾಯಿ ಯೋಜನೆ ಜಾರಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಈ ಕುರಿತು ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಪ್ರತಿಭಟನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಸರ್ಕಾರ ಇಂದು ಕಳಸಾ ಬಂಡೂರಿ ಯೋಜನಾ ವಿಸ್ತೃತ ವರದಿಗೆ ಅನುಮೋದನೆ ನೀಡಿದೆ. ಅವರು ಏನು ಬೇಕಾದರೂ ಮಾಡಲಿ. ನಾವು ನಮ್ಮ ವಿಚಾರವನ್ನು ಜನರ ಮುಂದೆ ಇಡುತ್ತೇವೆ ಎಂದರು.
ಸದನದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲೆ ಬಿಡುಗಡೆ ಮಾಡುವುದಾಗಿ ಆಡಳಿತ ಪಕ್ಷ ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ,’ ಬ್ರಹ್ಮಾಂಡ ಭ್ರಷ್ಟಾಚಾರ, ಮತ ಕಳ್ಳತನ ವಿಚಾರ ಚರ್ಚೆಗೆ 2 ಗಂಟೆಗಳ ಅವಕಾಶ ನೀಡಿ, ರಾತ್ರಿ 8 ಗಂಟೆವರೆಗೂ ಅಧಿವೇಶನ ನಡೆಸಿ ಎಂದು ಮನವಿ ಮಾಡಿಕೊಂಡೆವು. ಆದರೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಅವರ ವರದಿ ಸಲ್ಲಿಸಿ ಓಡಿ ಹೋಗಿದ್ದಾರೆ. ಈ ವಿಚಾರ ಚರ್ಚೆಗೆ ಅವಕಾಶ ನೀಡಲಿಲ್ಲ. ಈ ವಿಚಾರವನ್ನು ನಾವು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಜನರ ಧ್ವನಿಯನ್ನು ಎತ್ತಿ ಹಿಡಿಯುತ್ತೇವೆ ‘ ಎಂದು ತಿಳಿಸಿದರು.
























































