ಬೆಂಗಳೂರು: ಬಿಜೆಪಿ ಪರವಾಗಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಳ್ಳುತ್ತಿರುವ ಪ್ರಚಾರ ಕಾರ್ಯಕ್ರಮಕ್ಕೆ ಸರ್ಕಾರದ ಹಣ ಬಳಕೆ ಮಾಡಲಾಗಿದೆ. ಕಾರ್ಯಕ್ರಮಗಳಿಗೆ ಸ್ಥಳೀಯ ಆಡಳಿತದ ಪೂರ್ವಾನುಮತಿಯನ್ನೂ ಪಡೆಯಲಾಗಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಸಂಬಂಧ ಅವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.
Live : ಬೆಂಗಳೂರಿನಲ್ಲಿ ಪ್ರಧಾನಿ ಶ್ರೀ @narendramodi ಅವರ ಬೃಹತ್ ರೋಡ್ ಶೋ.#NaMoRocksBLR #PoornaBahumata4BJP #BJPYeBharavase #BJPWinningKarnataka #DoubleEngineSarkara https://t.co/Vj332KluHl
— BJP Karnataka (@BJP4Karnataka) April 29, 2023
ಏನಿದು ಪ್ರಕರಣ?
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ಸಮಾರಂಭ ಕಾರ್ಯಕ್ರಮವನ್ನು ಸರ್ಕಾರಿ ವೆಚ್ಚದಲ್ಲಿ ನಡೆಸಲು ಅವಕಾಶ ಇರುವುದಿಲ್ಲ. ಇಂತಹ ಯಾವುದೇ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗದ ಪೂರ್ವಾನುಮತಿ ಬೇಕಾಗಿರುತ್ತದೆ. ಆದರೆ, ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಡಳಿತ ಯಂತ್ರವನ್ನು ಬಳಸಿಕೊಳ್ಳಲಾಗಿದೆ ಎಂಬುದು ಕಾಂಗ್ರೆಸ್ ಆರೋಪ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಭಾರತೀಯ ಜನತಾ ಪಕ್ಷದ ರಸ್ತೆ ರ್ಯಾಲಿ ನಡೆಸಿದ್ದು ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರದ ಸುಮಾರು ಮೂರು ಕೋಟಿ ರೂಪಾಯಿಗಳ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. ಇದರ ಜೊತೆಗೆ ಐದು ಕಿಲೋ ಮೀಟರ್ ರಸ್ತೆ ವ್ಯಾಪ್ತಿಯಲ್ಲಿ ಚುನಾವಣಾ ರ್ಯಾಲಿಯ ವ್ಯವಸ್ಥೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಇತರ ಸರ್ಕಾರಿ ಸಂಸ್ಥೆಗಳ ಸೇವೆಯನ್ನು ಬಳಸಿಕೊಳ್ಳಲಾಗಿದೆ ಎಂದು ದೂರಿರುವ ಮಾಜಿ ಶಾಸಕ ರಮೇಶ್ ಬಾಬು, ಅನಧಿಕೃತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇಲ್ಲದೆ ದೊಡ್ಡ ಪ್ರಮಾಣದಲ್ಲಿ ಪ್ರಚಾರ ಸಾಮಗ್ರಿ ಬಳಸುವ ಮೂಲಕ ಬಿಬಿಎಂಪಿಗೆ ಪಾವತಿ ಮಾಡಬೇಕಾಗಿದ್ದ ಅನುಮತಿ ಶುಲ್ಕವನ್ನು ಪಾವತಿ ಬಿಜೆಪಿಯು ವಂಚನೆ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದರಿ ಪ್ರಚಾರ ಕಾರ್ಯಕ್ಕೆ ಸರ್ಕಾರಿ ಸಂಸ್ಥೆಗಳು ಯಾವುದೇ ಹಣವನ್ನು ವೆಚ್ಚ ಮಾಡಲು ಅಥವಾ ಈ ಸಂಸ್ಥೆಗಳ ವತಿಯಿಂದ ಉಸ್ತುವಾರಿ ಮಾಡಲು ಅವಕಾಶ ಇರುವುದಿಲ್ಲ. ಇದು ಒಂದು ರಾಜಕೀಯ ಪಕ್ಷದ ಕಾರ್ಯಕ್ರಮವಾಗಿದ್ದು ಇದಕ್ಕೆ ತಗಲುವ ಎಲ್ಲ ಖರ್ಚು ವೆಚ್ಚಗಳನ್ನು ಕಾರ್ಯಕ್ರಮ ಆಯೋಜನೆ ಮಾಡುವ ರಾಜಕೀಯ ಪಕ್ಷಗಳು ಭರಿಸಬೇಕಾಗುತ್ತದೆ. ಆದರೆ ನರೇಂದ್ರ ಮೋದಿ ರವರ ರಾಜಕೀಯ ಕಾರ್ಯಕ್ರಮಕ್ಕೆ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಹಣವನ್ನು ಖರ್ಚುಮಾಡಿದ್ದು ಈ ಕಾರ್ಯಕ್ರಮಕ್ಕೆ ನಿಯಮಾನುಸಾರ ಅನುಮತಿಯನ್ನು ನೀಡಿರುವುದಿಲ್ಲ. ಬಿಬಿಎಂಪಿ ಕಾನೂನು ಉಲ್ಲಂಘನೆ ಮಾಡಿದ್ದು ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿರುತ್ತದೆ ಎಂದು ರನೇಶ್ ಬಾಬು ಆರೋಪಿಸಿದ್ದಾರೆ.
ನೀತಿ ಸಂಹಿತೆ ಜಾರಿಯಲ್ಲಿದ್ದರೂ ಬಿಜೆಪಿಯು ರಸ್ತೆ ಬದಿಯಲ್ಲಿ ಮತ್ತು ರಸ್ತೆಯ ಉದ್ದಕ್ಕೂ ಮತ್ತು ಪ್ರಮುಖ ಸ್ಥಳಗಳಲ್ಲಿ ಪಕ್ಷದ ವಿವಿಧ ಪ್ರಚಾರ ಸಾಮಗ್ರಿಗಳು, ಭಾವಚಿತ್ರ, ರಾಜಕೀಯ ಪಕ್ಷದ ಕಮಾನುಗಳು, ಅಭ್ಯರ್ಥಿಗಳ ಭಾವಚಿತ್ರ, ಪಕ್ಷದ ಪ್ರಚಾರ ಚಿಹ್ನೆ ಅಳವಡಿಸಿದ್ದು ಯಾವುದೇ ಪ್ರಚಾರ ಸಾಮಗ್ರಿಗೆ ಪೂರ್ವಾನುಮತಿ ಪಡೆದಿರುವುದಿಲ್ಲ. ದೊಡ್ಡ ಪ್ರಮಾಣದಲ್ಲಿ ಹಣ ಖರ್ಚು ಮಾಡಿದ್ದು ಸಾರ್ವಜನಿಕ ಸ್ಥಳಗಳನ್ನು ಯಾವುದೇ ಅನುಮತಿ ಇಲ್ಲದೆ ವಿರೂಪಗೊಳಿಸಲಾಗಿದೆ ಎಂದವರು ದೂರಿನಲ್ಲಿ ಬೆಳಕು ಚೆಲ್ಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರವರು ಶನಿವಾರ ಸಂಜೆ 5.20ಕ್ಕೆ ಬೆಂಗಳೂರು ಉತ್ತರದಲ್ಲಿ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮತ್ತು ಭಾನುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ರೋಡ್ ಶೋ ನಡೆಸುತ್ತಿದ್ದು ಈ ಕಾರ್ಯಕ್ರಮಗಳಿಗೆ ನಿಗದಿತ ಅನುಮತಿ ಪಡೆಯದೆ ರಸ್ತೆ ಬದಿಯಲ್ಲಿ ಪ್ರಚಾರ ಸಾಮಗ್ರಿಗಳನ್ನು ಬಳಸಿಕೊಳ್ಳಲಾಗಿದೆ. ಬಿಬಿಎಂಪಿಯ ಅಧಿಕಾರಿಗಳು ಭಾರತೀಯ ಜನತಾ ಪಕ್ಷದ ಪರವಾಗಿ ಸಹಕಾರ ನೀಡುತ್ತಿದ್ದು ಅನುಮತಿ ಇಲ್ಲದೆ ಅವರ ಪ್ರಚಾರ ಸಾಮಗ್ರಿಗಳನ್ನು ದೊಡ್ಡ ಪ್ರಮಾಣದಲ್ಲಿ ಬಳಸಿಕೊಳ್ಳಲು ಅವಕಾಶ ನೀಡಿರುತ್ತಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುವ ಜೊತೆಗೆ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಲಾಗಿದೆ ಎಂದು ರಮೇಶ್ ಬಾಬು ಆರೋಪಿಸಿದ್ದಾರೆ.
ಚುನಾವಣಾ ಆಯೋಗವು ಭಾರತೀಯ ಜನತಾ ಪಕ್ಷದ ಅನುಮತಿ ಇಲ್ಲದ ಇಂತಹ ಕಾನೂನು ಬಾಹಿರವಾದ ಕ್ರಮಗಳನ್ನು ನಿಯಂತ್ರಿಸಬೇಕು ಮತ್ತು ಬಿಬಿಎಂಪಿ ಅಧಿಕಾರಿಗಳು ಭಾರತೀಯ ಜನತಾ ಪಕ್ಷದ ಪರವಾಗಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡದಂತೆ ನಿರ್ದೇಶನ ನೀಡಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ರಮೇಶ್ ಬಾಬು ಅವರು ಈ ದೂರಿನಲ್ಲಿ ಕೋರಿದ್ದಾರೆ.






















































