ಬೆಂಗಳೂರು: ಕಾಂಗ್ರೆಸ್ ಪಕ್ಷದ ನೀತಿ ಕುಲಗೆಟ್ಟದ್ದು. ಹಿಜಾಬ್ ಪರ, ಶ್ರೀರಾಮನ ವಿರುದ್ಧ ನೀತಿಯಿಂದ ಜನತೆ ರಾಜ್ಯ ಸರಕಾರದ ವಿರುದ್ಧ ಒಗ್ಗಟ್ಟಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಡಿ.ವಿ.ಸದಾನಂದಗೌಡ ನುಡಿದಿದ್ದಾರೆ
ರಾಮ ವಿರೋಧಿ ಸರಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೂಗಳು ತೂಕಡಿಕೆ ಬಿಡಬೇಕು. ನಮ್ಮ ಸಂಸ್ಕøತಿ, ಆಚಾರ, ವಿಚಾರಗಳನ್ನು ರಕ್ಷಿಸಲು ನಾವು ಕಟಿಬದ್ಧರಾಗಬೇಕು ಎಂದು ತಿಳಿಸಿದರು. ಸಿದ್ದರಾಮಯ್ಯನವರ ಸರಕಾರವು ತಮ್ಮ ಕೀಳುಮಟ್ಟದ ರಾಜಕಾರಣವನ್ನು ಬಿಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರವು ಕರಸೇವಕರನ್ನು ಬಂಧಿಸುತ್ತಿರುವುದು ಖಂಡನೀಯ ಎಂದು ಶಾಸಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ಕುಮಾರ್ ಅವರು ತಿಳಿಸಿದರು. 1992ರಲ್ಲಿ ಕರಸೇವಕರನ್ನು ಹತ್ಯೆ ಮಾಡಲು ಮುಂದಾಗಿತ್ತು. ಈಗ ಜವಾಬ್ದಾರಿಯುತ ಮುಖ್ಯಮಂತ್ರಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರ ಹಿಂದೂವಿರೋಧಿ ನೀತಿ ಸ್ಪಷ್ಟವಾಗುತ್ತದೆ ಎಂದು ಟೀಕಿಸಿದರು.
ಅಲ್ಪಸಂಖ್ಯಾತರ ಬಗ್ಗೆ ಅತಿಯಾದ ಒಲವು ನಿಮ್ಮದು. ಹಿಂದೆ ಟಿಪ್ಪು ಜಯಂತಿ ಮಾಡಿದ್ದೀರಿ. ಕನ್ನಡ ಭಾಷಾ ಹೋರಾಟಗಾರರನ್ನು ಬಂಧಿಸುತ್ತೀರಿ. ರೈತ ವಿರೋಧಿ ನಿಲುವು ನಿಮ್ಮದು ಎಂದು ಸಿದ್ದರಾಮಯ್ಯರ ಸರಕಾರದ ವಿರುದ್ಧ ಆಕ್ಷೇಪ ಸೂಚಿಸಿದರು.
ಈ ಸರಕಾರ ಹಿಂದೂ ವಿರೋಧಿ, ರೈತ ವಿರೋಧಿ, ಕನ್ನಡ ವಿರೋಧಿ ಎಂದು ಟೀಕಿಸಿದರು. ಈ ಹೋರಾಟ ಶ್ರೀಕಾಂತ್ ಪೂಜಾರಿಯವರ ಬಿಡುಗಡೆ ಆಗುವವರೆಗೆ ಮುಂದುವರೆಯಲಿದೆ ಎಂದು ಎಚ್ಚರಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಸಂಸದ ಪಿ.ಸಿ.ಮೋಹನ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ತಿನ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ಸೇರಿ ಅನೇಕ ಮುಖಂಡರು, ಶಾಸಕರು, ಮಾಜಿ ಸಚಿವರು, ರಾಜ್ಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.























































