ಬೆಂಗಳೂರು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಅಯೋಧ್ಯ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹಾರಿಸಲಾಗಿದ್ದ ಹನುಮ ಧ್ವಜವನ್ನು ಕಾಂಗ್ರೆಸ್ ಸರ್ಕಾರ ಇಳಿಸಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ಹೊರಹಾಕಿದ್ದಾರೆ.
ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಹನುಮ ಧ್ವಜವನ್ನು ನಿಷೇಧಿಸಿದೆಯೇ? ನಿಷೇಧ ಮಾಡದಿದ್ದರೆ, ಅನುಮತಿ ಪಡೆದು ಧ್ವಜ ಸ್ಥಂಭಕೆ ಕಟ್ಟಿದ ಹನುಮಧ್ವಜವನ್ನು ಕಿತ್ತು ಹಾಕಿದ್ದು ಯಾಕೆ? ಅಧಿಕಾರಿಗಳ ಉದ್ಧಟನವಾದರೆ ಕೂಡಲೇ ಅವರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಿ. ಆಳುವವರ ಮರ್ಜಿಗೆ ಅನುಗುಣವಾಗಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದರೆ, ನಿಮಗೆ ತಾನು ಹಿಂದೂ ಎಂದು ಕರೆದುಕೊಳ್ಳುವ ಯಾವ ನೈತಿಕತೆಯು ಉಳಿದಿಲ್ಲ. ನನ್ನ “ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು” ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ಕಾಂಗ್ರಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ನೀವು ಮಾಡಿರುವುದು ಜನರ ಭಾವನೆಗಳನ್ನು ಕೆಣಕುವ ಕೆಲಸ. ಅಧಿಕಾರದ ಬಲದಿಂದ, ಅಧಿಕಾರದ ಮದದಿಂದ ಆಡಳಿತ ಯಂತ್ರದ ದುರುಪಯೋಗ ಮಾಡಿ ಧ್ವಜ ಇಳಿಸಿರಬಹುದು. ಇದೆ ಜನ ನಿಮ್ಮನ್ನು ಅಧಿಕಾರದಿಂದ ಇಳಿಸುತ್ತಾರೆ ಎಂಬುದನ್ನು ನೆನಪಿಟ್ಟುಕೊಳ್ಳಿ ಎಂದಿರುವ ಸಿ.ಟಿ.ರವಿ, ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಕಟುವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಮನೆ ಮನೆಯಲ್ಲೂ ಹನುಮ ಧ್ವಜ ಹಾರಿಸುವ ಅಭಿಯಾನದ ಮೂಲಕ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಬೇಕೆಂದು ಸಿ.ಟಿ.ರವಿ ಅವರು ಜನತೆಗೆ ಕರೆ ಕೊಟ್ಟಿದ್ದಾರೆ.
























































