ಬೆಂಗಳೂರು: ಮಂಡ್ಯ ತಾಲ್ಲೂಕು ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು, ಆ ಧ್ವಜಸ್ತಂಭವನ್ನು ಕರ್ನಾಟಕದ ಧ್ವಜ ಮತ್ತು ತ್ರಿವರ್ಣ ಧ್ವಜ ಹಾರಿಸುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡುತ್ತೇವೆ, ಜೊತೆಗೆ ಗ್ರಾಮ ಪಂಚಾಯತಿಯ ಷರತ್ತುಗಳಿಗೆ ಬದ್ಧರಾಗಿರುವುದಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಗೌರಿಶಂಕರ ಸೇವಾ ಟ್ರಸ್ಟ್ ನವರ ಮನವಿಯ ಮೇರೆಗೆ ಗ್ರಾಮ ಪಂಚಾಯತಿಯವರು ಧ್ವಜಸ್ತಂಭ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ. ಆ ನಂತರ ಅಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಆ ಜಾಗದಲ್ಲಿ ಹನುಮಧ್ವಜವನ್ನು ಹಾರಿಸಿದ್ದಾರೆ. ನಿಯಮ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಧ್ವಜ ಇಳಿಸುವಂತೆ ಜನರಿಗೆ ತಿಳಿ ಹೇಳಿದ್ದಾರೆ. ಆದರೆ ಸ್ಥಳೀಯರು ಪೊಲೀಸರ ಹಾಗೂ ಜಿಲ್ಲಾಡಳಿತದ ಮನವಿಯನ್ನು ತಿರಸ್ಕರಿಸಿ, ಪ್ರತಿಭಟನೆ, ಸಂಘರ್ಷಕ್ಕೆ ಇಳಿಯುವ ಮೂಲಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವಂತೆ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ
ಬಿಜೆಪಿ ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ ಇಂತಹದ್ದೊಂದು ಸ್ಥಿತಿ ನಿರ್ಮಾಣ ಮಾಡಲಾಗಿದೆ. ಬಿಜೆಪಿ ನಾಯಕರು ಮಂಡ್ಯದಲ್ಲಿ ಕೋಮುಗಲಭೆ ಎಬ್ಬಿಸುವ ಸಂಚು ರೂಪಿಸಿರುವುದು ಲೋಕಸಭಾ ಚುನಾವಣೆಗೆ ನಡೆಸಿರುವ ತಯಾರಿಯಾಗಿದೆ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಷ್ಟ್ರಧ್ವಜ ಹಾರಬೇಕಿದ್ದ ಜಾಗದಲ್ಲಿ ಹನುಮಧ್ವಜ ಹಾರಿಸಿರುವುದು, ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಈ ಯಾವುವೂ ಆಕಸ್ಮಿಕ ಅಲ್ಲ. ಈ ಘಟನೆ @BJP4Karnataka ಹಾಗೂ ಸಂಘ ಪರಿವಾರದ ಪೂರ್ವ ನಿಯೋಜಿತ ಕೃತ್ಯ. ರಾಜ್ಯ ಸರ್ಕಾರದ ವಿರುದ್ಧ ವ್ಯವಸ್ಥಿತವಾಗಿ ಜನರನ್ನು ಎತ್ತಿಕಟ್ಟುವ ಉದ್ದೇಶದಿಂದಲೇ… pic.twitter.com/2FTVglwH7T
— Siddaramaiah (@siddaramaiah) January 28, 2024


























































