ಬೆಂಗಳೂರು: ರಾಜ್ಯದಲ್ಲಿನ ನಾಚಿಕೆಗೆಟ್ಟ ಸರ್ಕಾರ SSLC ಪೂರ್ವ ಸಿದ್ಧತಾ ಪರೀಕ್ಷಾ ವೆಚ್ಚವನ್ನು ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದವರು ದೂರಿದ್ದಾರೆ. ಅಕ್ರಮ ಸುಲಿಗೆಯಲ್ಲಿ ‘ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ಹೆಚ್ಡಿಕೆ ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಅಕ್ರಮ ಸುಲಿಗೆಯಲ್ಲಿ 'ಸಿದ್ದಹಸ್ತ'ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆ ಮಾಡುತ್ತಿದೆ, ಅದೂ ಲಜ್ಜೆಗೆಟ್ಟು. ಇದೇ ಫೆಬ್ರವರಿ 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ.2/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 3, 2024
ಪ್ರಶ್ನೆಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ. ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರ್ಕಾರ ಎಷ್ಟರ ಮಟ್ಟಿಗೆ ದಿವಾಳಿಯೆದ್ದು ಹೋಗಿದೆ ಎನ್ನುವುದಕ್ಕೆ ಉದಾಹರಣೆ ಎಂದಿರುವ ಕುಮಾರಸ್ವಾಮಿ, ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪ ನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಅವರು ಫರ್ಮಾನು ಹೊರಡಿಸಿದ್ದಾರೆ ಎಂದು ದೂರಿದ್ದಾರೆ.
ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ. ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಕುಮಾರಸಾವಮಿ ಆಗ್ರಹಿಸಿದ್ದಾರೆ.


























































