ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಬಲೆ ಬೀಸಿರುವ ಎಸ್ಐಟಿ ಪೊಲೀಸರು, ಇದೀಗ ಎಚ್ಚರಿಕೆಯ ನಡೆ ಅನುಸರಿಸುತ್ತಿದ್ದಾರೆ.
ಬಂಧನ ಭೀತಿಯಿಂದ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಅವರ ಅವರ ಪಾಸ್ಪೋರ್ಟ್ ರದ್ದುಪಡಿಸುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಆರೋಪಿಯ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಕೋರಿ ಕೋರ್ಟ್ ಮೊರೆ ಹೋಗಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕಾಗಿ ಬಲೆ ಬೀಸಿರುವ ಎಸ್ಐಟಿ, ಈಗಾಗಾಲೇ ಬ್ಲೂಕಾರ್ನರ್ ನೊಟೀಸ್ ಸಹಿತ ಹಲವು ಅಸ್ತ್ರಗಳನ್ನು ಪ್ರಯೋಗಿಸಿದೆ. ಇದೇ ವೇಳೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಭಾರತಕ್ಕೆ ಮರಳಲು ಹಲವಾರು ಬಾರಿ ಟಿಕೆಟ್ ಮಾಡಿ ಅದನ್ನು ರದ್ದುಪಡಿಸಿ ಕಣ್ಣಾಮುಚ್ಚಾಲೆ ಆಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಸ್ಪೋರ್ಟ್ ರದ್ದತಿ ಮಾಡಲುವಕೋರಿ ಕೋರ್ಟ್ ಮೊರೆ ಹೋಗಬಹುದೇ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಕಾನೂನು ತಜ್ಞರ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಲು ಕೋರಿ ಸಿಎಂ ಸಿದ್ದರಾಮಯ್ಯ ಈ ಹಿಂದೆಯೇ ಪ್ರಧಾನಿಗೆ ಪತ್ರ ಬರೆದಿದ್ದರು. ಇದೀಗ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ಕೈಗೊಂಡಿರುವ ಎಸ್ಐಟಿ ಕೂಡಾ ಅದೇ ರೀತಿಯ ಚಿಂತನೆಯಲ್ಲಿರುವುದು ಕುತೂಹಲಕಾರಿ ಬೆಳವಣಿಗೆ.