ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ಜೆಡಿಎಸ್ ಶಾಸಕ ಸೂರಜ್ ರೇವಣ್ಣರನ್ನು ಅವರನ್ನು ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದು ಗಂಭೀರ ಪ್ರಕರಣವಾಗಿರುವುದರಿಂದ ಹೆಚ್ಚಿನ ವಿಚಾರಣೆಗಾಗಿ ಮತ್ತೆ ತಮ್ಮ ಕಸ್ಟಡಿಗೆ ಪಡೆಯಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲು ಚಿಂತನೆ ನಡೆಸಿದ್ದಾರೆ.
ಹಾಸನದಲ್ಲಿ ಭಾನುವಾರ ಬಂಧನಕ್ಕೊಳಗಾದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸಂಜೆ ಬೆಂಗಳೂರಿಗೆ ಕರೆತಂದ ಪೊಲೀಸರು 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ನ್ಯಾಯಾಧೀಶರು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.
ಈ ನಡುವೆ ಸೂರಜ್ ರೇವಣ್ಣ ವಿರುದ್ದ ದಾಖಲಾಗಿರುವುದು ಗಂಭೀರ ಪ್ರಕರಣವಾಗಿರುವುದರಿಂದ ಸಿಐಡಿ ತನಿಖೆಗೆ ಸರ್ಕಾರ ಆದೇಶೀಸಿದೆ. ಈ ಪ್ರಕರಣದ ತನಿಖೆಯನ್ನು ವಹಿಸಿಕೊಳ್ಳುವ ಅಧಿಕಾರಿಗಳ ತಂಡ ಆರೋಪಿ ಸೂರಜ್ ರೇವಣ್ಣ ಅವರನ್ನು ವಿಚಾರಣೆಗೆ ಗುರಿಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ತಮ್ಮ ವಶಕ್ಕೆ ಒಪ್ಪಿಸಲು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಸಿಐಡಿ ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.