ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ.
ಸುರಕ್ಷಿತ ಕೆಲಸದ ವಾತಾವರಣ ಸೃಷ್ಟಿಸಬೇಕಾಗಿದೆ. ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದೆ. ಪ್ರಸ್ತಾವಿತ ವೈಯಕ್ತಿಕ ಸುರಕ್ಷತಾ ಕ್ರಮಗಳಲ್ಲಿ ಬಣ್ಣ-ಕೋಡೆಡ್ ಐಡಿ ಬ್ಯಾಡ್ಜ್ಗಳು, ವೈಯಕ್ತಿಕ ಭದ್ರತಾ ಎಚ್ಚರಿಕೆಗಳು, SOS ರಿಮೋಟ್ಗಳು ಮತ್ತು ಹೂಟರ್ಗಳು ಇರಲಿವೆ. ಇತರ ಉಪಕ್ರಮಗಳಲ್ಲಿ ಸುರಕ್ಷಿತ ಸಾರಿಗೆ ಆಯ್ಕೆಗಳು, ಸಮಾಲೋಚನೆ ಸೇವೆಗಳು ಮತ್ತು ಆತ್ಮರಕ್ಷಣೆ ಮತ್ತು ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುವ ತರಬೇತಿ ಸೇರಿವೆ ಎಂದು ಸಚಿವರು ವಿವರಿಸಿದರು.
ಮಾಜಿ ಸೇನಾ ಸಿಬ್ಬಂದಿಯಿಂದ ಕೇಂದ್ರೀಯ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸುವ ಯೋಜನೆಗಳನ್ನು ಅಧಿಕಾರಿಗಳು ಪ್ರಸ್ತುತಪಡಿಸಿದರು, ಸಿಸಿಟಿವಿ ಕಣ್ಗಾವಲು ಮತ್ತು ವೈಯಕ್ತಿಕ ಭದ್ರತಾ ಎಚ್ಚರಿಕೆ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ನಿಯಂತ್ರಣ ಕೊಠಡಿಯು 24/7 ಸಹಾಯವಾಣಿ ಕೂಡ ಹೊಂದಿರುತ್ತದೆ. ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು, ಬೀದಿ ದೀಪಗಳನ್ನು ಸುಧಾರಿಸಲು ಮತ್ತು ಪುರುಷ ಮತ್ತು ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ಕರ್ತವ್ಯ ಕೊಠಡಿಗಳು ಮತ್ತು ವಿಶ್ರಾಂತಿ ಕೊಠಡಿಗಳನ್ನು ನೀಡಬೇಕಾಗಿದೆ. ವೈದ್ಯಕೀಯ ಕ್ಯಾಂಪಸ್ಗಳಾದ್ಯಂತ ಸಮಗ್ರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು AI ತಂತ್ರಜ್ಞಾನದ ಮೂಲಕ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುತ್ತದೆ.
ಈ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆಗೆ ಸಮಿತಿ ರಚಿಸಲಾಗುವುದು ಎಂದು ಡಾ.ಪಾಟೀಲ್ ತಿಳಿಸಿದರು. ಯಾವುದೇ ಭದ್ರತಾ ಲೋಪಗಳಿಗೆ ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಔಷಧಗಳ ಖರೀದಿಗೆ ಹೊಸ ಟೆಂಡರ್ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರಾದ ಡಾ.ಪಾಟೀಲ್ ಸೂಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ ರಾಥೋಡ್ ಅವರು ಪ್ರಸ್ತುತ ಭದ್ರತಾ ಕ್ರಮಗಳ ಬಗ್ಗೆ ವಿವರಣೆ ನೀಡಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ವೆಂಕಟೇಶಮೂರ್ತಿ, ರಾಷ್ಟ್ರೀಯ ವೈದ್ಯಕೀಯ ಮಿಷನ್ ನಿರ್ದೇಶಕರಾದ ವೈ. ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.