ನವದೆಹಲಿ: ಸುಸ್ಥಿರ ಕೃಷಿ ಉತ್ತೇಜನ ಮತ್ತು ಮಣ್ಣಿನ ಆರೋಗ್ಯ ಸಂರಕ್ಷಣೆ ಉದ್ದೇಶದಿಂದ 2026ರ ಖಾರಿಫ್ ಹಂಗಾಮಿಗೂ ಮುನ್ನ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಸಮತೋಲಿತ ರಸಗೊಬ್ಬರ ಬಳಕೆ ಕುರಿತು ದೇಶವ್ಯಾಪಿ ಜಾಗೃತಿ ಅಭಿಯಾನ ಆರಂಭಿಸಿದೆ.
ಕೃಷಿ ವಿಜ್ಞಾನ ಕೇಂದ್ರಗಳು ಮತ್ತು ವಿವಿಧ ಸಂಶೋಧನಾ ಸಂಸ್ಥೆಗಳ ಮೂಲಕ ಕಳೆದ ಒಂದು ತಿಂಗಳಿನಿಂದ ಹಲವು ರಾಜ್ಯಗಳಲ್ಲಿ ರೈತರಿಗೆ ತರಬೇತಿ, ಜಾಗೃತಿ ಶಿಬಿರ ಹಾಗೂ ರೈತ-ವಿಜ್ಞಾನಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಮಣ್ಣಿನ ಪರೀಕ್ಷೆ ಆಧಾರಿತ ಪೋಷಕಾಂಶ ನಿರ್ವಹಣೆ, ಸಮಗ್ರ ಪೋಷಕಾಂಶ ನಿರ್ವಹಣೆ, ಜೈವಿಕ ಗೊಬ್ಬರ, ಹುಳು ಗೊಬ್ಬರ ಮತ್ತು ಹಸಿರು ಗೊಬ್ಬರ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಲಾಗುತ್ತಿದೆ.
ಪಂಜಾಬ್ನ ಫಜಿಲ್ಕಾದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮಣ್ಣಿನ ಪರೀಕ್ಷೆ ಮತ್ತು ಸಮತೋಲಿತ ರಸಗೊಬ್ಬರ ಬಳಕೆಯ ಮಹತ್ವ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. ಪಶ್ಚಿಮ ಬಂಗಾಳ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲೂ ವಿವಿಧ ತರಬೇತಿ ಕಾರ್ಯಕ್ರಮಗಳು ನಡೆದಿವೆ.
ಪಶ್ಚಿಮ ಬಂಗಾಳದಲ್ಲಿ ಖಾರಿಫ್ ಭತ್ತದ ಕೃಷಿಗೆ ಸಂಬಂಧಿಸಿದ ಸುಸ್ಥಿರ ಪೋಷಕಾಂಶ ನಿರ್ವಹಣೆ ಕುರಿತು ಕಾರ್ಯಕ್ರಮಗಳು ನಡೆದರೆ, ಮಧ್ಯಪ್ರದೇಶದಲ್ಲಿ ಹಸಿರು ಗೊಬ್ಬರ, ಜೈವಿಕ ಗೊಬ್ಬರ ಹಾಗೂ ನಿಖರ ಕೃಷಿ ಕುರಿತು ರೈತರಿಗೆ ಮಾಹಿತಿ ನೀಡಲಾಗಿದೆ.
“ಮೇರಾ ಗಾಂವ್ ಮೇರಾ ಗೌರವ್” ಉಪಕ್ರಮದಡಿ ರೈತರಿಗೆ ಮಣ್ಣಿನ ಫಲವತ್ತತೆ ಕಾಪಾಡುವುದು, ಕೃಷಿ ವೆಚ್ಚ ಕಡಿಮೆ ಮಾಡುವುದು ಮತ್ತು ಪರಿಸರ ಸ್ನೇಹಿ ಕೃಷಿ ವಿಧಾನಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಮಣ್ಣಿನ ಆರೋಗ್ಯ ಕಾಪಾಡಿ ದೀರ್ಘಕಾಲೀನ ಆಹಾರ ಭದ್ರತೆ ಖಚಿತಪಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಐಸಿಎಆರ್ ತಿಳಿಸಿದೆ.

























































