ಚಿತ್ರದುರ್ಗ: ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಚಟುವಟಿಕೆಗಳಿಗೆ ವೇದಿಕೆಯಾಗಿದೆ. ಚುನಾವಣಾ ಘೋಷಣೆಗೆ ಮುನ್ನವೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ್ದ ಬಿಜೆಪಿ, ಈ ಬಾರಿ ಹಿರಿಯೂರು ಕ್ಷೇತ್ರವನ್ನು ಗೆಲ್ಲಲು ವಿಶೇಷ ರಣತಂತ್ರ ರೂಪಿಸಿದೆ ಎನ್ನಲಾಗಿದೆ. ಕ್ಷೇತ್ರದಲ್ಲಿ ನಿರ್ಣಾಯಕ ಮತಬ್ಯಾಂಕ್ ಹೊಂದಿರುವ ‘ಕಾಡುಗೊಲ್ಲ’ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಕಸರತ್ತು ಆರಂಭಿಸಿದೆ.
ಈ ಹಿನ್ನೆಲೆಯಲ್ಲಿ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅವರನ್ನು ಪಕ್ಷಕ್ಕೆ ಸೆಳೆದು, ಅವರನ್ನು ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕ್ಷೇತ್ರದಲ್ಲಿ ಪ್ರಭಾವ ಹೊಂದಿರುವ ಸಮುದಾಯದ ನಾಯಕನನ್ನು ಮುಂದಿರಿಸಿ ರಾಜಕೀಯ ಲಾಭ ಪಡೆಯುವ ಲೆಕ್ಕಾಚಾರ ಬಿಜೆಪಿ ಮಾಡುತ್ತಿದೆ ಎನ್ನಲಾಗಿದೆ.
ಇನ್ನೊಂದೆಡೆ ಕಾಂಗ್ರೆಸ್ ಪಾಳಯದಲ್ಲೂ ಟಿಕೆಟ್ಗಾಗಿ ತೀವ್ರ ಪೈಪೋಟಿ ಆರಂಭವಾಗಿದೆ. ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೆಸರು ಮುಂಚೂಣಿಯಲ್ಲಿದೆ. ಇದೇ ಹಿರಿಯೂರು ಕ್ಷೇತ್ರದಿಂದ ಈ ಹಿಂದೆ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದ ಅವರು, 2023ರ ಚುನಾವಣೆಯಲ್ಲಿ ಸೋತ ಬಳಿಕ ಕಾಂಗ್ರೆಸ್ ಸೇರಿದ್ದರು. ಇದೀಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ಗಾಗಿ ಆಕಾಂಕ್ಷಿಯಾಗಿದ್ದಾರೆ.
ಇದೇ ವೇಳೆ ನಿಧನರಾದ ಸಚಿವ ಡಿ. ಸುಧಾಕರ್ ಅವರ ಪುತ್ರ ಸುಹಾಸ್ ಸಹ ಅನುಕಂಪದ ಅಲೆಯಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಒಳಗೂ ಟಿಕೆಟ್ ಫೈಟ್ ತೀವ್ರಗೊಂಡಿದ್ದು, ಹೈಕಮಾಂಡ್ ಅನುಕಂಪದ ರಾಜಕಾರಣಕ್ಕೆ ಮನ್ನಣೆ ನೀಡುತ್ತದೆಯಾ ಅಥವಾ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಅವಕಾಶ ನೀಡುತ್ತದೆಯಾ ಎಂಬುದು ಕುತೂಹಲ ಮೂಡಿಸಿದೆ.




























































