ಬೆಂಗಳೂರು: ರಾಜ್ಯದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಶೇ.60 ರಷ್ಟು ಹೆಚ್ಚಿಸುವ ಮಹತ್ವದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಸಂತೋಷ್ ಲಾಡ್, “ನಮ್ಮ ಸರ್ಕಾರವು ಕಾರ್ಮಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಮೂಲಕ ಕನಿಷ್ಠ ವೇತನವನ್ನು ಶೇ.60 ರಷ್ಟು ಹೆಚ್ಚಿಸುವ ಅಧಿಸೂಚನೆ ಹೊರಡಿಸಿದೆ” ಎಂದು ತಿಳಿಸಿದ್ದಾರೆ.
ಈ ಪರಿಷ್ಕೃತ ವೇತನ ವ್ಯವಸ್ಥೆಯಿಂದ ರಾಜ್ಯದ ಅಸಂಘಟಿತ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳ ಕಾರ್ಮಿಕರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಸಿಗಲಿದೆ ಎಂದು ಅವರು ಹೇಳಿದ್ದಾರೆ.
ಗೌರವಾನ್ವಿತ ಸುಪ್ರೀಂ ಕೋರ್ಟ್ (Supreme Court) ನೀಡಿದ ನಿರ್ದೇಶನಗಳಿಗೆ ಅನುಗುಣವಾಗಿ ಕನಿಷ್ಠ ವೇತನ ಪರಿಷ್ಕರಣೆ ಮಾಡಲಾಗಿದೆ. ಜೊತೆಗೆ ಮೊದಲ ಬಾರಿಗೆ ರಾಜ್ಯದ ಎಲ್ಲಾ ನಿಗದಿತ ಉದ್ಯೋಗಗಳನ್ನು ಒಂದೇ ಅಧಿಸೂಚನೆಯ ಅಡಿಯಲ್ಲಿ ತರಲಾಗಿದ್ದು, ಹಿಂದಿನ ವರ್ಗೀಕರಣ ವ್ಯವಸ್ಥೆಯನ್ನು ನಾಲ್ಕು ವಲಯಗಳಾಗಿ ಪರಿಷ್ಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ 81 ನಿಗದಿತ ಉದ್ಯೋಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಕಾರ್ಮಿಕರ ಬದುಕಿಗೆ ಈ ಹೊಸ ವೇತನ ಪರಿಷ್ಕರಣೆ ಭರವಸೆ ಮತ್ತು ನೆರವು ನೀಡಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಕಾರ್ಮಿಕರ ಕನಿಷ್ಠ ವೇತನವನ್ನು 60% ಏರಿಕೆ ಮಾಡಿ ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ನಾಡಿನ ಶ್ರಮಿಕರ ಬಹು ವರ್ಷಗಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆ.
ಈ ಅಧಿಸೂಚನೆಯು ರಾಜ್ಯದ ಅಸಂಘಟಿತ ವಲಯ ಹಾಗೂ ನಿರ್ದಿಷ್ಟ ವಲಯಗಳ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಒದಗಿಸಲಿದೆ. ಕನಿಷ್ಠ ವೇತನ ನಿರ್ಧರಿಸುವಾಗ ಸುಪ್ರೀಂ ಕೋರ್ಟ್ ನ ಘನ… pic.twitter.com/pwgCpRMIMk
— Santosh Lad Official (@SantoshSLadINC) May 23, 2026


























































