ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಐವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಮೈಸೂರು ರಸ್ತೆಯ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಕ್ಷಣಾ ಕಾರ್ಯಾಚರಣೆಯ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಕೈ, ಕಾಲು, ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್, “10 ಕಾರ್ಮಿಕರ ಪೈಕಿ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಈ ಹಿಂದೆಯೇ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬೇಕು. ದುರಂತಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿ, ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ಅಲ್ಲದೆ, ಕ್ವಾರಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆದಿವೆಯೇ ಎಂಬುದನ್ನು ಸಮಗ್ರವಾಗಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.






































































