ಬೆಂಗಳೂರು: ವಿದ್ಯಾರ್ಥಿನಿಯ ನಗ್ನ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ತನಿಖೆಗಾಗಿ ಸಿಬಿಐಗೆ ವರ್ಗಾಯಿಸಿ ಎಂದು ರಾಜ್ಯದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಉಡುಪಿಯ ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿನ ವಿಡಿಯೋ ಚಿತ್ರೀಕರಣವನ್ನು ಖಂಡಿಸಿ ಮತ್ತು ಇದರ ಸಮಗ್ರ ತನಿಖೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅಶ್ವತ್ಥನಾರಾಯಣ, ಘಟನೆ ನಡೆದ ಕುರಿತು ಆರೋಪಿತ ವಿದ್ಯಾರ್ಥಿನಿಯರೇ ತಪ್ಪೊಪ್ಪಿಗೆ ಪತ್ರ ನೀಡಿದ್ದಾರೆ ಎಂದರು. ಘಟನೆ ನಡೆದುದು ನಿಜ; ಇದನ್ನು ಹಗುರವಾಗಿ ತೆಗೆದುಕೊಳ್ಳುವುದು ಸರಿಯಲ್ಲ ಎಂದು ತಿಳಿಸಿದರು. ಇದನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಲಾಗುತ್ತಿದೆ. ಇದಕ್ಕೆ ಓಲೈಕೆ, ಜಿಹಾದಿ ರಾಜಕಾರಣ ಕಾರಣ ಎಂದು ಟೀಕಿಸಿದರು.
ಕಂಡಿಷನ್ ಇಲ್ಲದೆ ಮತ ಹಾಕಿಸಿಕೊಂಡಿದ್ದೀರಿ. ಎಲ್ಲರಿಗೂ ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಕೊಡಿ ಎಂದ ಅವರು, ಕೇಂದ್ರದ ಅನುದಾನ, ರಾಜ್ಯದ ಕರ ಸಂಗ್ರಹಗಳನ್ನು ಬಳಸಿಕೊಳ್ಳಿ. ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಇವರಿಗೆ ಲೆಕ್ಕಾಚಾರದ ಕೊರತೆ ಇದೆ. ಅಭಿವೃದ್ಧಿ ಕಡೆ ಗಮನದ ಕೊರತೆ ಇದೆ. ಚಿಂತನೆಯ ಕೊರತೆ, ಅಸಹಾಯಕತೆ ಕಾಡುತ್ತಿದೆ. ಉತ್ತಮ ಆಡಳಿತ ಕೊಡಲಾಗದ ಈ ಸರಕಾರದಿಂದ ಅಭಿವೃದ್ಧಿ ಬಯಸಲಾಗದು ಎಂದು ಟೀಕಿಸಿದರು. ರೈತ ವಿರೋಧಿ, ಮಹಿಳಾ ವಿರೋಧಿ, ದಲಿತ ವಿರೋಧಿ ರಾಜ್ಯ ಸರಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಸೋತಿದೆ ಎಂದು ಅವರು ದೂರಿದರು. ಕಾಂಗ್ರೆಸ್ ಸರಕಾರವನ್ನು ಕಿತ್ತೆಸೆಯುವ ಕೆಲಸ ಆಗಬೇಕೆಂದು ಅವರು ತಿಳಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಮಾತನಾಡಿ, ಈ ಘಟನೆಯ ಸಮಗ್ರ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು. ಮೂವರು ವಿದ್ಯಾರ್ಥಿನಿಯರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ತಿಳಿಸಿದರು.
ತುಷ್ಟೀಕರಣದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ !
ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಮೇಲೆ ನಡೆದ ಅಮಾನುಷ ಕೃತ್ಯವನ್ನು ಖಂಡಿಸಿ, ಪ್ರಕರಣದ ಸತ್ಯಾಸತ್ಯತೆಯನ್ನು ಮರೆ ಮಾಚಲು ಯತ್ನಿಸುತ್ತಿರುವ @INCKarnataka ಸರ್ಕಾರದ ನಡೆಯನ್ನು ಪ್ರಶ್ನಿಸಿ ಹಾಗೂ ಸಮಗ್ರ ತನಿಖೆಗೆ ಆಗ್ರಹಿಸಿ ಇಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ… pic.twitter.com/cdFfb20oGt
— BJP Karnataka (@BJP4Karnataka) July 27, 2023
ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಇದೊಂದು ಉದ್ದೇಶಪೂರ್ವಕ ಕೃತ್ಯ. ಅಪರಾಧ ಮಾಡಿದ ಹೆಣ್ಮಕ್ಕಳನ್ನು ರಕ್ಷಿಸುವ ಮತ್ತು ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ಒತ್ತಡ ಹೇರುವ ಕೆಲಸ ನಡೆದಿದೆ. ಘಟನೆಯನ್ನು ಬೆಳಕಿಗೆ ತಂದವರ ಮೇಲೂ ಒತ್ತಡ ಹಾಕುತ್ತಿದ್ದಾರೆ. ಸಾಕ್ಷ್ಯ ನಾಶದ ಕೆಲಸವೂ ನಡೆದಿದೆ ಎಂದು ಟೀಕಿಸಿದರು.
ಬೆಂಗಳೂರು ಉತ್ತರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾರಾವ್, ಬೆಂಗಳೂರು ಕೇಂದ್ರ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ರೇಖಾ ಗೋವಿಂದ, ಬೆಂಗಳೂರು ದಕ್ಷಿಣ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ ಆನಂದ್ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.