ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು.
ಅಲ್ಲದೆ, ನೊಂದ ಕುಟುಂಬಗಳಿಗೆ ಟ್ಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್ ಗಳನ್ನು ಹಸ್ತಾಂತರ ಮಾಡಿದರು.
ಬೆಳಿಗ್ಗೆ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಅವರು ಮನೆಗೆ ಭೇಟಿ ನೀಡಿದ ಅವರು, ಪ್ರವೀಣ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಪ್ರವೀಣ್ ಪತ್ನಿ ಹಾಗೂ ಅವರ ತಂದೆ ತಾಯಿಗೆ ಸಾಂತ್ವನ ಹೇಳಿದರು. ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮ ಕುಟುಂಬಕ್ಕೆ ನ್ಯಾಯ ಸಿಗುವ ದೊರೆಯುವ ರೀತಿಯಲ್ಲಿ ಹೋರಾಟ ಮಾಡುತ್ತೇನೆ ಎಂದು ಭರವಸೆ ನೀಡಿದರು. ಆರ್ಥಿಕವಾಗಿ ಅಥವಾ ಯಾವುದೇ ರೀತಿಯ ಸಂಕಷ್ಟ ಎದುರಾದರೂ ನನಗೆ ಕರೆ ಮಾಡಿ. ನಮ್ಮ ಪಕ್ಷವು ನಿಮ್ಮ ನೆರವಿಗೆ ಧಾವಿಸುತ್ತದೆ ಅವರು ಎಂದು ಕುಟುಂಬದವರಿಗೆ ತಮ್ಮ ಮಾಬೈಲ್ ಸಂಖ್ಯೆಯನ್ನು ಕೊಟ್ಟರು. ನಿಮ್ಮೊಂದಿಗೆ ನಾನೀದ್ದೇನೆ. ಪ್ರವೀಣ ಅವರ ಆತ್ಮಕ್ಕೆ ಶಾಂತಿ ಸಿಗಲು ನಿಮ್ಮ ಮನೆ ಮಗನಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದು ನಿಮ್ಮ ಕುಟುಂಬಕ್ಕೆ ನೀಡುವ ವಚನ ಎಂದು ಕುಮಾರಸ್ವಾಮಿ ಅವರು ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಪ್ರವೀಣ್ ಅವರ ಪತ್ನಿ ನೂತನ ಅವರು, ನನ್ನ ಪತಿಯನ್ನು ಕೊಂದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕುಮಾರಸ್ವಾಮಿ ಅವರ ಬಳಿ ಕಣ್ಣೀರಿಟ್ಟರು. ಆಗ ಧೈರ್ಯ ತುಂಬಿದ ಅವರು, ತಮ್ಮ ವೈಯಕ್ತಿಕ ಮೊಬೈಲ್ ನಂಬರ್ ನೀಡಿ ಯಾವುದೇ ಸಮಸ್ಯೆ ಬಂದರೂ ತಮ್ಮನ್ನು ಸಂಪರ್ಕಿಸಬಹುದು. ತಮಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಧೈರ್ಯ ಕಳೆದುಕೊಳ್ಳಬೇಡಿ, ತಮ್ಮ ಕೆಲಸವನ್ನು ಮುನ್ನಡೆಸಿ ಎಂದು ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.







































































